ADVERTISEMENT

ಮೀಸಲು ಹೋರಾಟ| 22ರಿಂದ ಧರಣಿ, ಸ್ಪಂದಿಸದಿದ್ದರೆ ಆಮರಣ ಉಪವಾಸ: ಸ್ವಾಮೀಜಿ ಎಚ್ಚರಿಕೆ

21ರ ಪಂಚಮಸಾಲಿ ಸಮಾವೇಶ ಅರಮನೆ ಮೈದಾನಕ್ಕೆ ಸ್ಥಳಾಂತರ l ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 18:06 IST
Last Updated 13 ಫೆಬ್ರುವರಿ 2021, 18:06 IST
ತುಮಕೂರಿನಲ್ಲಿ ಸಿದ್ಧಲಿಂಗ ಸ್ವಾಮೀಜಿಯನ್ನು ಭೇಟಿಮಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ
ತುಮಕೂರಿನಲ್ಲಿ ಸಿದ್ಧಲಿಂಗ ಸ್ವಾಮೀಜಿಯನ್ನು ಭೇಟಿಮಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ   

ತುಮಕೂರು: ಪ್ರವರ್ಗ ‘2ಎ’ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಇದೇ 21ರಂದು ಬೆಂಗಳೂರು ನಗರದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಸಲು ಉದ್ದೇಶಿಸಿದ್ದ ಬಹಿರಂಗ ಸಮಾವೇಶವನ್ನು ಅರಮನೆ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ತುಮಕೂರು ತಲುಪಿದ್ದು, ಸಿದ್ಧಗಂಗಾ ಮಠದಲ್ಲಿ ತಂಗಿತ್ತು. ಶನಿವಾರ ಬೆಳಿಗ್ಗೆ ಸಿದ್ಧಲಿಂಗ ಸ್ವಾಮೀಜಿ ಜತೆ ಕೂಡಲಸಂಗಮ ಸ್ವಾಮೀಜಿ ಚರ್ಚಿಸಿದ ನಂತರ ಸಮಾಜದ ಮುಖಂಡರ ಜತೆಗೂ ಸಭೆ ನಡೆಸಿದರು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ‘ಸಭೆಯಲ್ಲಿ ಸ್ಥಳ ಬದಲಾವಣೆ ಬಗ್ಗೆ ನಿರ್ಧರಿಸಲಾಯಿತು. ವಿಧಾನಸೌಧಕ್ಕೆ ಅರಮನೆ ಮೈದಾನ ಹತ್ತಿರದಲ್ಲೇ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಯಿತು’ ಎಂದು ವಿವರಿಸಿದರು.

ADVERTISEMENT

10ಲಕ್ಷಕ್ಕೂ ಹೆಚ್ಚು ಜನ

21ರ ಬಹಿರಂಗ ಸಮಾವೇಶದಲ್ಲಿ ಪಂಚಮಸಾಲಿ ಸಮುದಾಯದ 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಸಮಾವೇಶದ ನಂತರ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲಾಗುವುದು. ಫೆ. 22ರಿಂದ ವಿಧಾನಸೌಧದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಮಾರ್ಚ್ 4ರ ಒಳಗೆ ಸರ್ಕಾರ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮಾರ್ಚ್ 5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇವೆ ಎಂದು ಪ್ರಕಟಿಸಿದರು.

‘ಮೀಸಲಾತಿ ಸಂಬಂಧ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದರು. ಈವರೆಗೂ ಅವರು ಆಯೋಗಕ್ಕೆ ಪತ್ರ ಬರೆದಿಲ್ಲ’ ಎಂದು ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ‘ಸಮಾಜದ ಸ್ವಾಮೀಜಿಗಳನ್ನು ಎತ್ತಿಕಟ್ಟುವ, ಹೋರಾಟವನ್ನು ಹತ್ತಿಕ್ಕುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಯಾವುದಕ್ಕೂ ಜಗ್ಗುವುದಿಲ್ಲ’ ಎಂದು ಗುಡುಗಿದರು. ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಇದ್ದರು.

ಯತ್ನಾಳಗೆ ನೋಟಿಸ್‌: ಅಸಮಾಧಾನ

ಹೋರಾಟ ಬೆಂಬಲಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ನೋಟಿಸ್ ನೀಡಿರುವುದಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

‘ಸಮಾಜದ ಮುಖಂಡರಿಗೆ ನೋಟಿಸ್ ಕೊಟ್ಟು, ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಯಾವ ಅಡೆತಡೆಗಳು ಎದುರಾದರೂ, ಯಾರು ಏನೇ ಮಾಡಿದರೂ ಹೋರಾಟ ನಿಲ್ಲುವುದಿಲ್ಲ’ ಎಂದು ಅವರು ಎಚ್ಚರಿಸಿದ್ದಾರೆ.

ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಲಿಂಗಾಯತ ಮಠಾಧೀಶರು ಬೆಂಗಳೂರಿನಲ್ಲಿ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿ, ‘ಲಿಂಗಾಯತ ಸಮುದಾಯದ ಎಲ್ಲರಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಿ. ಅದಕ್ಕೆ ತಮ್ಮ ಅಭ್ಯಂತರವಿಲ್ಲ. ಆದರೆ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ಸಿಗಬೇಕು ಎಂಬುದಷ್ಟೇ ತಮ್ಮ ಹೋರಾಟ’ ಎಂದು ಸ್ಪಷ್ಟಪಡಿಸಿದರು.

18ರಂದು ‘ಅಹಿಂದ’ ಒಕ್ಕೂಟದಿಂದ ಪ್ರತಿಭಟನೆ

ಮಡಿಕೇರಿ: ’ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಗಣತಿ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ, ನಗರದಲ್ಲಿ ಫೆ.18ರಂದು ಪ್ರತಿಭಟನೆ ನಡೆಸಲು ಅಹಿಂದ ಒಕ್ಕೂಟ ನಿರ್ಧರಿಸಿದೆ’ ಎಂದು ಒಕ್ಕೂಟದ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್‌‌ ಶನಿವಾರ ಇಲ್ಲಿ ಹೇಳಿದರು.

‘ವರದಿ ತಯಾರಿಸಲು ಸರ್ಕಾರ ₹ 158 ಕೋಟಿ ಖರ್ಚು ಮಾಡಿದೆ. 1 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದರು. ಆದರೆ, ವರದಿಯನ್ನು ಅಧಿಕೃತವಾಗಿ ಬಹಿರಂಗಪಡಿಸುತ್ತಿಲ್ಲ’ ಎಂದು ಆಕ್ರೋಶ ಹೊರಹಾಕಿದರು.

‘ವರದಿ ಬಿಡುಗಡೆ ಮಾಡದಿದ್ದರೆ ಸಣ್ಣಪುಟ್ಟ ಸಮುದಾಯಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಹೇಗಿದೆ ಎಂಬುದೇ ತಿಳಿಯುವುದಿಲ್ಲ. ಸಣ್ಣಪುಟ್ಟ ಸಮುದಾಯಗಳಿಗೆ ಮೀಸಲಾತಿ ಸೌಲಭ್ಯ ಸಿಗಬೇಕಿದ್ದರೆ ಹೋರಾಟ ಅನಿವಾರ್ಯ. ಈ ಹಿಂದೆ ನಾವು ಹೋರಾಟ ಮಾಡಿದ್ದರ ಫಲವಾಗಿ ಕೊಡಗಿನ ಮೂಲ ನಿವಾಸಿಗಳಾದ ‘ಬಣ್ಣ’, ‘ಹೆಗ್ಗಡೆ’ ಹಾಗೂ ‘ಕಾಪಾಳ’ ಜನಾಂಗಕ್ಕೆ ಮೀಸಲಾತಿ ಸೌಲಭ್ಯ ಸಿಕ್ಕಿದೆ. ಇನ್ನೂ ಹಲವು ಸಣ್ಣ ಸಮುದಾಯಕ್ಕೆ ಮೀಸಲಾತಿ ದೊರೆಯಬೇಕಿದೆ’ ಎಂದು ಪ್ರತಿಪಾದಿಸಿದರು.

***
ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಲಕ್ಷಾಂತರ ಜನ ಸೇರಿದ್ದ ಕುರುಬರ ಸಮಾವೇಶಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಈ ಮುಜುಗರ ತಪ್ಪಿಸಿಕೊಳ್ಳಲು ಆರ್‌ಎಸ್‌ಎಸ್‌ ಹೆಸರು ಹೇಳುತ್ತಿದ್ದಾರೆ.
- ಜಗದೀಶ್ ಶೆಟ್ಟರ್, ಸಚಿವ

ಮುಖ್ಯಮಂತ್ರಿ ಆಗುವವರೆಗೂ ಅಹಿಂದ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಜನರಿಗೆ ಮೋಸ ಮಾಡಿದರು. ಹಿಂದುಳಿದವರ ಪರ ಕೆಲಸ ಮಾಡುತ್ತಾರೆ ಎಂಬ ಹುರುಪು ಜನರಲ್ಲಿತ್ತು ಆ ಸಮುದಾಯಗಳಿಗೆ ನ್ಯಾಯ ಒದಗಿಸಲಿಲ್ಲ.
- ಶ್ರೀರಾಮುಲು, ಸಮಾಜಕಲ್ಯಾಣ ಸಚಿವ

ಅಹಿಂದ ವಿಚಾರವಾಗಿ ದನಿ ಎತ್ತಿರುವವರು ರಾಜಕೀಯವಾಗಿ ಮೂಲೆ ಗುಂಪಾಗಿದ್ದಾರೆ. ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ಕೂಗು ಎತ್ತಿದ್ದಾರೆ.
- ಎಸ್‌.ಟಿ.ಸೋಮಶೇಖರ್‌, ಸಚಿವ

ಮೀಸಲಾತಿಗೆ ಒತ್ತಾಯಿಸಿ ನಡೆಸುತ್ತಿರುವ ಪಾದಯಾತ್ರೆ, ಹೋರಾಟದಲ್ಲಿ ಸಚಿವರು ಭಾಗವಹಿಸುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ
- ಟಿ.ಬಿ.ಜಯಚಂದ್ರ, ಮಾಜಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.