ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಹೋರಾಟದ ಮುಂದಿನ ನಡೆ ನಿರ್ಧರಿಸಲು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಮುದಾಯದ ಮುಖಂಡರ ದುಂಡು
ಮೇಜಿನ ಸಭೆ ಗುರುವಾರ (ಫೆಬ್ರುವರಿ 25) ನಡೆಯಲಿದೆ.
ಹೋರಾಟದ ನೇತೃತ್ವ ವಹಿಸಿರುವಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಅಖಿಲ ಭಾರತ ಪಂಚಮಸಾಲಿ ಮಹಾಸಭಾ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಅಂದು ಸಂಜೆ 4 ಗಂಟೆಗೆ ಸಭೆ ನಿಗದಿಯಾಗಿದೆ.
ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ವಿಜಯಾನಂದ ಕಾಶಪ್ಪನವರ, ‘ಹೋರಾಟದ ಮುಂದಿನ ಹೆಜ್ಜೆ ಕುರಿತು ದುಂಡು ಮೇಜಿನ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗುವುದು. ಸಮುದಾಯದ ಶಾಸಕರು, ಸಂಸದರು, ಕೂಡಲ ಸಂಗಮ ಪಂಚಮಸಾಲಿ ಪೀಠದ ಧರ್ಮದರ್ಶಿಗಳು, ಪಂಚಮಸಾಲಿ ಮಹಾಸಭಾ ಪದಾಧಿಕಾರಿಗಳು ಹಾಗೂ ವಿವಿಧ ಮುಂಚೂಣಿ ಸಂಘಟನೆಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ಎರಡನೇ ದಿನದ ಧರಣಿ ಅಂತ್ಯ:
‘2ಎ’ ಮೀಸಲಾತಿಗೆ ಆಗ್ರಹಿಸಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರವೂ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಯಿತು. ಬೆಳಿಗ್ಗೆ 9ರಿಂದ ಧರಣಿ ಸಂಜೆ 6ರವೆರಗೂ ನಡೆದ ಧರಣಿಯಲ್ಲಿ ವಿಜಯಪುರ ಜಿಲ್ಲೆಯ ಹೆಚ್ಚಿನ ಜನರು ಪಾಲ್ಗೊಂಡಿದ್ದರು.
ಬಿಜೆಪಿ ಶಾಸಕ ಸಿದ್ದು ಸವದಿ, ಜೆಡಿಯು ಮುಖಂಡ ಎಂ.ಪಿ. ನಾಡಗೌಡ, ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವು ಪ್ರಮುಖರು ಧರಣಿಯಲ್ಲಿ ಭಾಗವಹಿಸಿದ್ದರು.
ಬುಧವಾರವೂ ಧರಣಿ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯ ಪಂಚಮಸಾಲಿ ಸಮುದಾಯದ ಜನರು ಮೂರನೇ ದಿನದ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.