ADVERTISEMENT

ಪಂಚಾಯಿತಿ ಚುನಾವಣೆ: ಅಭಿಪ್ರಾಯ ಕೇಳಿದ ಆಯೋಗ

​ಪ್ರಜಾವಾಣಿ ವಾರ್ತೆ
Published 22 ಮೇ 2020, 21:44 IST
Last Updated 22 ಮೇ 2020, 21:44 IST

ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸದ್ಯ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಸಾಧ್ಯತೆ ಕುರಿತು ಅಭಿಪ್ರಾಯ ತಿಳಿಸುವಂತೆ ಸೂಚಿಸಿ ರಾಜ್ಯ ಚುನಾವಣಾ ಆಯೋಗ ಎಲ್ಲ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಪತ್ರ ರವಾನಿಸಿದೆ.

‘ಜಿಲ್ಲಾಡಳಿತ ಮತ್ತು ತಾಲ್ಲೂಕು ಕಚೇರಿ ಅಧಿಕಾರಿ, ಸಿಬ್ಬಂದಿ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವುದು ಆಯೋಗಕ್ಕೆ ತಿಳಿದಿದೆ. ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದಾದರೆ ಮತದಾರರ ಪಟ್ಟಿ ತಯಾರಿಸಿ, ಹೊಸ ತಿದ್ದುಪಡಿಯಂತೆ ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಬೇಕಾಗುತ್ತದೆ. ಇದೆಲ್ಲವನ್ನೂ ಶೀಘ್ರ ಮಾಡಲು ಸಾಧ್ಯವಾಗುತ್ತದೆಯೇ ಎಂದು ತಿಳಿಸಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.

‘ಸರ್ಕಾರ ಈಚೆಗೆ ಮೀಸಲಾತಿಯನ್ನು ಹತ್ತು ವರ್ಷದ ಬದಲಿಗೆ ಐದು ವರ್ಷಕ್ಕೆ ‌ಇಳಿಸಿರುವುದರಿಂದ ಹೊಸದಾಗಿ ಆವರ್ತನೆ ಮೇಲೆ ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ’ ಎಂದು ಪತ್ರದಲ್ಲಿ ವಿವರಿಸಲಾಗಿದ್ದು, ಕೊರೊನಾ ನಿಯಂತ್ರಣ ಕ್ರಮಗಳ ನಡುವೆಯೂ ಚುನಾವಣೆಗೆ ಸಿದ್ಧತೆ ನಡೆಸಲು ಸಾಧ್ಯವೇ ಎಂಬ ಉತ್ತರವನ್ನು ಬಯಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.