ADVERTISEMENT

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ

ಅನರ್ಹ ಶಾಸಕರು ನಮ್ಮ ಅಳಿಯಂದಿರು: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 19:26 IST
Last Updated 8 ನವೆಂಬರ್ 2019, 19:26 IST
ಕೆ.ಎಸ್‌. ಈಶ್ವರಪ್ಪ
ಕೆ.ಎಸ್‌. ಈಶ್ವರಪ್ಪ   

ಮಂಗಳೂರು: ‘ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದ್ದು, ಪರಿಣಿತರ ಜತೆಗೆ ಚರ್ಚಿಸಿ, ಸೂಕ್ತ ತಿದ್ದುಪಡಿ ತರಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಬಂಟ್ವಾಳದಲ್ಲಿ ಮಾತನಾಡಿದ ಅವರು, ‘ಪಂಚಾಯಿತಿ ಜನಪ್ರತಿನಿಧಿಗಳು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೂ ಈ ಬಗ್ಗೆ ತಿಳಿಸಿದ್ದು, ಈಗಾಗಲೇ ಸಾಕಷ್ಟು ಚರ್ಚೆ ನಡೆಸಲಾಗಿದೆ. ನ್ಯೂನತೆಗಳನ್ನು ಸರಿಪಡಿಸುವ ಉದ್ದೇಶದಿಂದ ತಿದ್ದುಪಡಿ ತರಲಾಗುವುದು’ ಎಂದರು.

‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನವನ್ನು ಹೆಚ್ಚಿಸುವ ನಿಟ್ಟಿನಲ್ಲೂ ಪರಿಶೀಲನೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

‘ರಾಜ್ಯದ ಎಲ್ಲ 6,021 ಗ್ರಾಮ ಪಂಚಾಯಿತಿ ಕಟ್ಟಡಗಳಲ್ಲಿ ಮುಂದಿನ ವರ್ಷ ಸೌರ ಚಾವಣಿ ಅಳವಡಿಸಲಾಗುವುದು. ವಿದ್ಯುತ್ ಬಿಲ್‌ ಪಾವತಿಗೆ ಗ್ರಾಮ ಪಂಚಾಯಿತಿಗಳಿಗೆ ಸಂಪನ್ಮೂಲ ಕ್ರೋಡೀಕರಣದಲ್ಲಿ ಆಗುತ್ತಿರುವ ಕೊರತೆಯನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಅನರ್ಹ ಶಾಸಕರು ನಮ್ಮ ಅಳಿಯಂದಿರು:‘ಅನರ್ಹ ಶಾಸಕರು ನಮ್ಮ ಅಳಿಯಂದಿರು. ಎಲ್ಲ ಶಾಸಕರಿಗೆ ಕೊಡುವ ಸೌಲಭ್ಯಗಳನ್ನು ಅವರಿಗೂ ನೀಡಲಾಗುವುದು. ಅನರ್ಹ ಶಾಸಕರಿಂದಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅವರ ಏನು ಬೇಡಿಕೆ ಇಡುತ್ತಾರೋ ಅದನ್ನು ಈಡೇರಿಸುವುದು ನಮ್ಮ ಕರ್ತವ್ಯ’ ಎಂದರು.

‘ಟಿಪ್ಪು ಜಯಂತಿ ಮಾಡುವಂತೆ ಯಾರೂ ಬೇಡಿಕೆ ಇಟ್ಟಿರಲಿಲ್ಲ. ಕಾಂಗ್ರೆಸ್‌ ಮತ್ತು ಸಿದ್ದರಾಮಯ್ಯ ಇದನ್ನು ಆರಂಭ ಮಾಡಿದರು. ಹಿಂದೂ–ಮುಸ್ಲಿಮರು ಸೌಹಾರ್ದದಿಂದ ಬದುಕುವುದು ಕಾಂಗ್ರೆಸ್ಸಿಗರಿಗೆ ಬೇಕಿಲ್ಲ. ಅದಕ್ಕಾಗಿಯೇ ಟಿಪ್ಪು ಜಯಂತಿಯಂತಹ ಆಚರಣೆ ಆರಂಭಿಸಿದ್ದರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.