ಬೆಂಗಳೂರು:ಅಪಾರ್ಟ್ಮೆಂಟ್ಗಳಲ್ಲಿ ಕುಡಿಯುವ ನೀರಿನಂಥ ಮೂಲಸೌಕರ್ಯ ಒದಗಿಸಿಕೊಡದೇ ಅಪಾರ್ಟ್ಮೆಂಟ್ಗಳನ್ನು ಮಾರಾಟ ಮಾಡುತ್ತಿರುವುದರಿಂದ 5 ವರ್ಷಗಳ ಕಾಲ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡದಿರಲುಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.
ಸದಾಶಿವನಗರ ಗೃಹ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಸಾಕಷ್ಟು ಅಪಾರ್ಟ್ಮೆಂಟ್ ಕಟ್ಟಲಾಗಿದೆ. ಆದರೆ, ಮಾರಾಟ ಮಾಡುವ ವೇಳೆ ಕುಡಿಯುವ ನೀರಿನಂಥ ಮೂಲಸೌಕರ್ಯ ಒದಗಿಸಿಕೊಡುವ ಭರವಸೆ ನೀಡುವುದಿಲ್ಲ. ನೀರಿನ ಅಭಾವದಿಂದ ಅಪಾರ್ಟ್ಮೆಂಟ್ನಲ್ಲಿರುವ ಬಹುತೇಕರು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿಕೊಂಡು, ಚರ್ಮರೋಗದಂಥ ಸಮಸ್ಯೆಗೆ ತುತ್ತಾಗಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡದೇ ಇರಲು ಚಿಂತಿಸಲಾಗಿದೆ. ಈ ಸಂಬಂಧ ಎಲ್ಲಾ ಡೆವಲಪರ್ಸ್ರ ಸಭೆ ನಡೆಸಿ, ಅವರ ಅಭಿಪ್ರಾಯವನ್ನು ಪಡೆದುಕೊಳ್ಳಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು.
ಐದು ವರ್ಷದ ಬಳಿಕ ನಗರಕ್ಕೆ ವಿವಿಧ ಮೂಲಗಳಿಂದ ನೀರು ಸರಬರಾಜು ಆಗಲಿದ್ದು, ಈ ಸಮಸ್ಯೆ ನೀಗಲಿದೆ ಎಂದರು.
ಪ್ರಸ್ತುತ, ಇರುವ ಅಪಾರ್ಟ್ಮೆಂಟ್ನಲ್ಲಿ ಎಸ್ಟಿಪಿ ಅಳವಡಿಕೆ ಮಾಡಿಕೊಂಡಿದ್ದಾರಾ ಎಂಬುದನ್ನು ಪರಿಶೀಲಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ನಗರದಲ್ಲಿ ನೀರಿನ ಸಮಸ್ಯೆ ನೀಗಿಸಲು ಕಾವೇರಿ ಐದನೇ ಹಂತದ ಯೋಜನೆ ಪ್ರಗತಿಯಲ್ಲಿದೆ. ಆದರೆ ಇದು ಸಾಲದು. ಹೀಗಾಗಿ ಲಿಂಗನಮಕ್ಕಿಯಿಂದ ನೀರು ತರಲು ಡಿಪಿಆರ್ ಮಾಡಲು ಸೂಚಿಸಿದ್ದೇನೆ. ಇದಕ್ಕೂ ವಿರೋಧ ಕೇಳಿ ಬಂದಿದೆ. ಡಿಪಿಆರ್ ಬಳಿಕ ಸಾಧಕ ಬಾಧಕವನ್ನು ಪರಿಶೀಲಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಹೇಳಿದರು.
ಸ್ಟೀಲ್ಬ್ರಿಡ್ಜ್ ಯೋಜನೆ ಈ ಹಿಂದೆಯೇ ಕೈಬಿಡಲಾಗಿದೆ. ಹೈಕೋರ್ಟ್ಗೂ ಈ ಸಂಬಂಧ ಮಾಹಿತಿ ನೀಡಿದ್ದೇವೆ. ಆದರೆ, ಇದೇ ಮಾರ್ಗವಾಗಿ ಎಲಿವೇಟೆಡ್ ಕಾರಿಡಾರ್ ಮಾಡಲು ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇವೆ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಭ್ರಷ್ಟಾಚಾರ ಆಗಲಿದೆ ಎಂಬ ಕಾರಣಕ್ಕೆ ವಿರೋಧವಿತ್ತು. ಈ ಮಾರ್ಗಕ್ಕೆ ಪರ್ಯಾಯ ಯೋಜನೆಗೆ ವಿರೋಧವಿಲ್ಲ. ಹೀಗಾಗಿ ಎಸ್ಟೀಮ್ ಮಾಲ್ನಿಂದ ಚಾಲುಕ್ಯವರೆಗೆ ಎಲಿವೇಡೆಡ್ ಕಾರಿಡಾರ್ ನಿರ್ಮಿಸಲು ಡಿಪಿಆರ್ ಮಾಡಲಾಗುತ್ತಿದೆ. ಬಳಿಕ ಜನಾಭಿಪ್ರಾಯದ ಮೇರೆಗೆ ಯೋಜನೆ ಕೈಗೆತ್ತಿಕೊಳ್ಳಲಿದ್ದೇವೆ ಎಂದರು.
ಸಾರಿಗೆ ನೌಕರರ ಸಮಸ್ಯೆ ಬಗ್ಗೆ ಸಿಎಂ ಜೊತೆ ಚರ್ಚೆ
ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ನವರು ಇಂದು ಸದಾಶಿವನಗರ ಗೃಹ ಕಚೇರಿಗೆ ಆಗಮಿಸಿ, ವಿವಿಧ ಬೇಡಿಕೆ ಈಡೇರಿಸುವಂತೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಫೆಡರೇಷನ್ನ ಪದಾಧಿಕಾರಿಗಳು ಇಂದು ವಿವಿಧ ಬೇಡಿಕೆ ಈಡೇರಿಸಲು ಸಾರಿಗೆ ನೌಕರರ ಬೆಂಗಳೂರು ಚಲೋ ಕಾರ್ಯಕ್ರಮ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳ ಬಸ್ ಪಾಸ್ ವೆಚ್ಚದ ಬಾಬ್ತು ಭರಿಸುವುದು, ನಾಲ್ಕು ನಿಗಮದ ಬದಲು ಒಂದೇ ನಿಗಮ ಮಾಡುವುದು ಸೇರಿದಂತೆ ಅನೇಕ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರ ಜೊತೆ ಚರ್ಚಿಸಲಾಗುವುದು. ಅಲ್ಲದೆ, ಸಾರಿಗೆ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.