ಕಲಬುರ್ಗಿ: ಕನ್ನಡ ಶಾಲೆಗಳನ್ನು ಮುಚ್ಚುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಆದರೆ ಇದಕ್ಕೆ ಪೋಷಕರ ಸಹಕಾರವೂ ಅಗತ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.
ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಶ್ರೀವಿಜಯ ವೇದಿಕೆಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕನ್ನಡ ನಾಡು ನುಡಿಯ ಹಿತಾಸಕ್ತಿಯನ್ನು ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ.
ಡಾ.ಡಿ.ಎಂ.ನಂಜುಂಡಪ್ಪ ವರದಿಯ ಅನುಸಾರ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ನೀಡುತ್ತಾ ಬರಲಾಗುತ್ತಿದೆ. ಹೈದರಾಬಾದ್ ಕರ್ನಾಟಕ ಎಂಬ ಹೆಸರನ್ನು ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡುವ ಮೂಲಕ ಈ ವಿಭಾಗದ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ' ಎಂದು ಹೇಳಿದರು.
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಿದ ಪರಿಣಾಮ ಈ ಭಾಗದ ವಿದ್ಯಾರ್ಥಿಗಳಿಗೆ ವಾರ್ಷಿಕ 700ಕ್ಕೂ ಅಧಿಕ ವೈದ್ಯಕೀಯ ಸೀಟುಗಳು, ಸಾವಿರಾರು ಎಂಜಿನಿಯರಿಂಗ್ ಸೀಟುಗಳು ದೊರೆಯುತ್ತಿವೆ ಎಂದು ಹೇಳಿದರು.
ಎರಡು ವರ್ಷಕ್ಕೊಮ್ಮೆ ಕಲ್ಯಾಣ ಕರ್ನಾಟಕ ಉತ್ಸವ: ಈ ಭಾಗದ ಸಾಂಸ್ಕೃತಿಕ ವೈವಿಧ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಯೋಜಿಸುವ ಚಿಂತನೆ ಸರ್ಕಾರಕ್ಕೆ ಇದೆ. ಈ ಭಾಗದ ವಿದ್ಯಾರ್ಥಿಗಳು ಬೆಂಗಳೂರಿಗೆ ಬಂದಾಗ ವಸತಿಗಾಗಿ ಅಲೆದಾಡುವುದನ್ನು ತಪ್ಪಿಸಲು ನಾಗರಬಾವಿಯ ಬಳಿ 500 ಕೊಠಡಿಗಳುಳ್ಳ ವಸತಿ ನಿಲಯ ನಿರ್ಮಿಸಲಾಗುತ್ತಿದೆ. ಅದಕ್ಕಾಗಿ 3 ಎಕರೆ ಜಾಗವನ್ನೂ ನೀಡಲಾಗಿದೆ ಎಂದು ತಿಳಿಸಿದರು.
ಬಸವ ಕಲ್ಯಾಣದಲ್ಲಿದ್ದ ಅನುಭವ ಮಂಟಪವು ಸಂಸದೀಯ ವ್ಯವಸ್ಥೆಯ ಪರಿಕಲ್ಪನೆಯನ್ನು ಮೊದಲು ಮೂಡಿಸಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಈ ಬಗ್ಗೆ ಜಾಗತಿಕ ವೇದಿಕೆಗಳಲ್ಲಿ ಪ್ರಸ್ತಾಪಿಸಿದ್ದಾರೆ. ಇಂತಹ ನೆಲದಲ್ಲಿ ನಮ್ಮ ಸರ್ಕಾರ ಅಭಿವೃದ್ಧಿ ಪರ್ವವನ್ನೇ ಆರಂಭಿಸಿದೆ. ಕಳೆದ ನವೆಂಬರ್ ನಲ್ಲಿ ಉದ್ಘಾಟನೆಯಾದ ಕಲಬುರ್ಗಿ ವಿಮಾನ ನಿಲ್ದಾಣದಿಂದ ಕೆಲವೇ ದಿನಗಳಲ್ಲಿ ದೇಶದ ರಾಜಧಾನಿ ದೆಹಲಿಗೆ ವಿಮಾನಯಾನ ಆರಂಭವಾಗಲಿದೆ' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.