ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜ.27ರಂದು 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮ ಆಯೋಜಿಸಿದ್ದು, ರಾಜ್ಯದ ಮಕ್ಕಳು ಕಾರ್ಯಕ್ರಮದ ಗರಿಷ್ಠ ಪ್ರಯೋಜನ ಪಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಸೂಚಿಸಿದರು.
ನಗರದಲ್ಲಿ ಮಂಗಳವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಪೂರ್ವ ಸಿದ್ಧತೆಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಕ್ಕಳು ಒತ್ತಡದಿಂದ ಹೊರಬಂದು ಖುಷಿಯಿಂದ ಪರೀಕ್ಷೆ ಬರೆಯುವಂತೆ ಪ್ರೋತ್ಸಾಹಿಸಲು ದೆಹಲಿಯ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆನ್ಲೈನ್, ಪತ್ರಗಳ ಮೂಲಕ ಮಕ್ಕಳು, ಪಾಲಕರು ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸುವರು. ಮಾಹಿತಿಗೆ https://www.mygov.in/ppc-2023 ವೆಬ್ಸೈಟ್ಗೆ ಸಂಪರ್ಕಿಸಬಹುದು. ಹೆಚ್ಚಿನ ಮಕ್ಕಳು ಪ್ರಯೋಜನ ಪಡೆಯಲು ಶಾಲೆಗಳಲ್ಲಿ ‘ಸ್ಕ್ರೀನ್’ ವ್ಯವಸ್ಥೆ ಕಲ್ಪಿಸಬೇಕು. ಪೋಷಕರೂ ಭಾಗವಹಿಸಬೇಕು ಎಂದು ಸಚಿವರು ಕೋರಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತ ಆರ್.ವಿಶಾಲ್, ಸಮಗ್ರ ಕರ್ನಾಟಕ ಯೋಜನಾ ನಿರ್ದೇಶಕಿ ಕಾವೇರಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.