ADVERTISEMENT

ಸಲೀಂ–ಉಗ್ರಪ್ಪ ಮಾತುಕತೆ: ಪಕ್ಷಕ್ಕೆ ಮುಜುಗರವಾಗಿರುವುದು ನಿಜ– ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 20:08 IST
Last Updated 13 ಅಕ್ಟೋಬರ್ 2021, 20:08 IST
   

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಕಾಂಗ್ರೆಸ್ ಪಕ್ಷದಲ್ಲಿ ಯಾವ ಜಗಳವೂ ಇಲ್ಲ. ಗುಂಪುಗಳೂ ಇಲ್ಲ. ಉಗ್ರಪ್ಪ ಮತ್ತು ಸಲೀಂ ನಡುವಿನ ಮಾತುಕತೆಗೆ ಸಂಬಂಧಿಸಿದಂತೆ ಕೆ. ರೆಹಮಾನ್ ಖಾನ್ ಅವರ ನೇತೃತ್ವದ ಶಿಸ್ತು ಸಮಿತಿ ನಿರ್ಧಾರ ಕೈಗೊಳ್ಳಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ರಾಜಕಾರಣದಲ್ಲಿ ಚಪ್ಪಾಳೆ ಹೊಡೆಯುವ
ವರು, ಜೈಕಾರ ಹಾಕುವವರು, ಕಲ್ಲು ಎಸೆಯುವ
ವರು, ಮೊಟ್ಟೆ ಎಸೆಯುವವರು, ಧಿಕ್ಕಾರ ಕೂಗುವ
ವರು ಎಲ್ಲ ಪಕ್ಷಗಳಲ್ಲೂ ಇರುತ್ತಾರೆ’ ಎಂದರು.

ADVERTISEMENT

‘ಅವರು ಮಾತನಾಡಿಲ್ಲ (ಉಗ್ರಪ್ಪ ಮತ್ತು ಸಲೀಂ) ಎಂದು ನಾನು ಹೇಳಲು ಹೋಗುವುದಿಲ್ಲ. ನೀವು (ಮಾಧ್ಯಮ) ತೋರಿಸಿರುವುದು ನಿಜ. ಆದರೆ, ಅದು ಇಬ್ಬರ ನಡುವಣ ಆಂತರಿಕ ಮಾತುಕತೆ. ಅಧಿಕೃತ ಹೇಳಿಕೆ ಅಲ್ಲ. ಈ ಬಗ್ಗೆ ಉಗ್ರಪ್ಪ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ’ ಎಂದರು.

‘ನಾನು ಮಾಧ್ಯಮಗಳ ತಪ್ಪು ಎಂದು ಯಾಕೆ ಹೇಳಲಿ? ನಾವು ಮಾತನಾಡುವುದನ್ನು ನೀವು ತೋರಿಸುತ್ತೀರಿ. ಹಿಂದೆ, ಯಡಿಯೂರಪ್ಪ ಹಾಗೂ ಅನಂತಕುಮಾರ್ ಮಾತನಾಡಿದ್ದನ್ನು ನೀವು ತೋರಿಸಿದ್ದೀರಿ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಅದೇ ರೀತಿ ಎಚ್. ವಿಶ್ವನಾಥ್, ಬಸನಗೌಡ ಪಾಟೀಲ ಯತ್ನಾಳ್‌ ಅವರು ಮಾತನಾಡಿರುವುದನ್ನೂ ತೋರಿಸಿದ್ದೀರಿ. ಅದೇ ರೀತಿ ಈಗ ತೋರಿಸಿದ್ದೀರಿ. ಆದರೆ, ಆ ಸಂಭಾಷಣೆಗೂ ನನಗೂ ಯಾವುದೇ ಸಂಬಂಧ ಇಲ್ಲ’ ಎಂದರು.

‘ಪರ್ಸೆಂಟೇಜ್ ವಿಚಾರದಲ್ಲಿ ಯಾರಾದರೂ ದೂರು ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ. ಅವರು ಸ್ವಯಂಪ್ರೇರಿತರಾಗಿ ಕೇಸ್ ದಾಖಲಿಸಿದರೂ ಒಳ್ಳೆಯದೇ. ಪರ್ಸೆಂಟೇಜ್ ಬಗ್ಗೆ ನಮ್ಮ ಪಕ್ಷದಲ್ಲಿ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ. ಬಿಜೆಪಿ ನಾಯಕರ ಶೇ 30 ಕಮಿಷನ್ ಬಗ್ಗೆ ಎಚ್. ವಿಶ್ವನಾಥ್ ಮಾತನಾಡಿದ್ದಾರೆ. ಮಾಜಿ ಸಚಿವರೊಬ್ಬರು ಬೆಡ್ ರೂಮಿನಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದಾಗ ಅವರ ಬಳಿ ಹೋಗಿ ಯಾಕೆ ಪ್ರಶ್ನೆ ಮಾಡಲಿಲ್ಲ’ ಎಂದೂ ಶಿವಕುಮಾರ್‌ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.