ಬೆಂಗಳೂರು: ‘ಮುಂದಿನ ದಿನಗಳಲ್ಲಿ ‘ಪಂಚಾಯತ್ ರಾಜ್ ಸಂಘಟನೆ’ಯನ್ನು ಬಲಪಡಿಸುವ ಮೂಲಕ ಮತಗಟ್ಟೆ ಮಟ್ಟದಿಂದ ಪಕ್ಷ ಸಂಘಟನೆಗೆ ರೂಪುರೇಷೆ ಸಿದ್ಧಪಡಿಸಿ, ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು’ ಎಂದು ಪಕ್ಷದ ಕಾರ್ಯಕರ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸಲಹೆ ನೀಡಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ದೇಶದಲ್ಲಿ ಅತ್ಯುತ್ತಮ ಆಡಳಿತ ನೀಡಲು ಹಾಗೂ ಪ್ರಜಾಪ್ರಭುತ್ವವನ್ನು ತಳಮಟ್ಟದಿಂದ ಬಲಪಡಿಸಲು ರಾಜೀವ್ ಗಾಂಧಿ ಜಾರಿಗೆ ತಂದ ಪಂಚಾಯತ್ ರಾಜ್ ವ್ಯವಸ್ಥೆಯ ತಿದ್ದುಪಡಿ ಮಸೂದೆ ಸಹಕಾರಿಯಾಗಿದೆ. ಇದರ ಮೂಲಕ ದೇಶದಲ್ಲಿ ಮಹಿಳೆಯರಿಗೆ, ಯುವಕರಿಗೆ ಹಾಗೂ ಹೆಚ್ಚಿನ ಜನರಿಗೆ ಅಧಿಕಾರ ಸಿಗುವಂತಾಗಿದೆ’ ಎಂದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಎಐಸಿಸಿ ಸಂಚಾಲಕರಾದ ಗೀತಾಕೃಷ್ಣನ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ. ನಾರಾಯಣ ಸ್ವಾಮಿ, ಶಾಸಕ ಶಿವಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಪಕ್ಷದ ಮುಖಂಡರಾದ ನಾರಾಯಣ ಸ್ವಾಮಿ, ಸಂದೀಪ್, ವಿ.ಎಸ್.ಆರಾಧ್ಯ, ಕೃಷ್ಣಪ್ಪ, ಶೇಖರ್, ಮುನಿಶಾಮಣ್ಣ, ಪ್ರಸಾದ್, ಆರ್.ಕೆ.ರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.