ಬೆಂಗಳೂರು: ‘₹2 ಕೋಟಿ ಅನುದಾನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಹೊಂದಿರುವ ಪಶು ಸಂಜೀವಿನಿ ವಾಹನ ಸೇವೆ ಜಾರಿಗೆ ತರಲಾಗುತ್ತಿದ್ದು, 15 ಜಿಲ್ಲೆಗಳಿಗೆ ಸೌಲಭ್ಯ ನೀಡಲಾಗುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಟ್ಟು 15 ಪಶು ಸಂಜೀವಿನಿ ವಾಹನಗಳಿಗೆ ವಿಧಾನಸೌಧದ ಆವರಣದಲ್ಲಿ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಈ ವಾಹನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿ ವಿವಿಧ ಆರೋಗ್ಯ ಸೇವೆ ಲಭ್ಯವಿರುತ್ತವೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು’ ಎಂದರು.
ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಮಾತನಾಡಿ, ‘ರಾಜ್ಯದಲ್ಲಿ ಗೋ ರಕ್ಷಣೆಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜಿಲ್ಲೆಗಳಿಗೆ ಈ ವಾಹನ ಸೌಲಭ್ಯ ವಿಸ್ತರಿಸಲು ಉದ್ದೇಶಿಸಲಾಗಿದೆ’ ಎಂದರು.
‘ರಾಜ್ಯದಲ್ಲಿ ಗೋ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂಗಾರು ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತರುವ ಯೋಚನೆಯಿದೆ’ ಎಂದರು.
‘ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರ. ಸಂಪುಟದಿಂದ ನನ್ನ ಹೆಸರು ಕೈ ಬಿಡುವ ಸುದ್ದಿ ಸುಳ್ಳು’ ಎಂದೂ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.