
ಬೆಂಗಳೂರು: ‘ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಆರೋಪದಡಿ ಜೈಲಿನಲ್ಲಿರುವ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ಗೆ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿರುವ ನಗರದ ಸೆಷನ್ಸ್ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ರಾಜ್ಯ ಸರ್ಕಾರ, ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಈ ಕುರಿತು ಪ್ರಕರಣದ ತನಿಖೆ ನಡೆಸಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಮನವಿ ಏನು?: ‘ಆರೋಪಿಗಳ ಮೌಖಿಕ ಹೇಳಿಕೆ ಆಧರಿಸಿ ಜೈಲು ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಅಥವಾ ಆಕ್ಷೇಪಣೆ ಸ್ವೀಕರಿಸದೆಯೇ ಮನೆಯಿಂದ ಊಟ ತರಿಸಿಕೊಳ್ಳಲು ವಿಚಾರಣಾ ನ್ಯಾಯಾಲಯ ಅನುಮತಿ ನೀಡಿದೆ. ಇದು ಅಕ್ರಮ ಹಾಗೂ ಏಕಪಕ್ಷೀಯ. ಈ ಮೂವರೂ ಆರೋಪಿಗಳಿಗೆ ಮನೆಯಿಂದ ಊಟ ತಿರಿಸಿಕೊಳ್ಳಲು ಅನುಮತಿ ನೀಡಿದರೆ, ಜೈಲಿನ ಇತರ ಕೈದಿಗಳೂ ಇದೇ ರೀತಿಯ ಮನವಿ ಮಾಡಲಿದ್ದಾರೆ. ಇದು ಜೈಲಿನ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ, ಈ ಆದೇಶ ರದ್ದುಪಡಿಸಬೇಕು. ಅರ್ಜಿ ಇತ್ಯರ್ಥ ಆಗುವತನಕ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.