ADVERTISEMENT

ಸಂಘಟಿತರಾಗಿ ಭ್ರಷ್ಟಾಚಾರ; ಎನ್‌ಐಎ ತನಿಖೆಗೆ ಆಗ್ರಹಿಸಿ ಪಿಡಿಒ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 15:14 IST
Last Updated 14 ಡಿಸೆಂಬರ್ 2020, 15:14 IST
ಬೀದರ್ ಜಿಲ್ಲೆಯ ಪಿಡಿಒ ಮಂಗಳಾ ಕಾಂಬಳೆ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ
ಬೀದರ್ ಜಿಲ್ಲೆಯ ಪಿಡಿಒ ಮಂಗಳಾ ಕಾಂಬಳೆ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಂಘಟಿತರಾಗಿ ಭ್ರಷ್ಟಾಚಾರ ಎಸಗುತ್ತಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ನೀಡಿ, ತೊಂದರೆ ನೀಡುತ್ತಿದ್ದಾರೆ. ಇಂಥ ಸಂಘಟಿತ ಅಪರಾಧದ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಬೀದರ್ ಜಿಲ್ಲೆಯ ಪಿಡಿಒ ಮಂಗಳಾ ಕಾಂಬಳೆ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ಕುಳಿತಿದ್ದ ಅವರು, ‘ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆ ಇಲ್ಲದಂತಾಗಿದ್ದು, ಅವರ ಕೊಲೆಗೂ ಯತ್ನಗಳು ನಡೆಯುತ್ತಿವೆ. ಭ್ರಷ್ಟ ಜನಪ್ರತಿನಿಧಿಗಳ ಲೂಟಿಗೆ ಕುಮ್ಮಕ್ಕು ನೀಡದೇ ಪ್ರಾಮಾಣಿಕತೆಯಿಂದ ಕೆಲಸ ಮಾಡುವುದು ಅಪರಾಧವೇ’ ಎಂದು ಪ್ರಶ್ನಿಸಿದರು.

‘ಗ್ರಾಮ ಪಂಚಾಯಿತಿಯಲ್ಲಿ ನಡೆದ ಅವ್ಯವಹಾರ ಪ್ರಶ್ನಿಸಿ ಹಿರಿಯ ಅಧಿಕಾರಿಗಳು ಹಾಗೂ ಸಚಿವರಿಗೆ ದೂರು ನೀಡಿದ್ದೆ. ಅದಕ್ಕಾಗಿ ನನ್ನ ಮೇಲೆ ಗೂಂಡಾಗಳನ್ನು ಬಿಟ್ಟು ಕೊಲೆಗೆ ಯತ್ನಿಸಲಾಯಿತು. ಕೆಲವರು ಅತ್ಯಾಚಾರಕ್ಕೂ ಯತ್ನಿಸಿದರು. ಅದರ ವಿರುದ್ಧ ದೂರು ನೀಡಿದರೆ ಪೊಲೀಸರೂ ಕ್ರಮ ಕೈಗೊಂಡಿರಲಿಲ್ಲ. ನನ್ನ ಅಳಲು ತೋಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟಿದ್ದೆ’ ಎಂದೂ ತಿಳಿಸಿದರು.

ADVERTISEMENT

‘ರಾಜ್ಯದಲ್ಲಿರುವ ಭ್ರಷ್ಟಾಚಾರ ತೊಲಗಿಸಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ವ್ಯವಸ್ಥಿತವಾಗಿ ಹಬ್ಬಿರುವ ಮಾಫಿಯಾವನ್ನು ಬುಡಸಮೇತ ಕಿತ್ತೆಸೆಯಬೇಕು’ ಎಂದೂ ಅವರು ಒತ್ತಾಯಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಪತ್ರ ರವಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.