ಬೆಂಗಳೂರು: ಕೊರೋನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈಗಿರುವ ಮೂರು ಅಥವಾ ನಾಲ್ಕು ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್ಗಳಿಲ್ಲ, ವೆಂಟಿಲೇಟರ್ಗಳ ಕೊರತೆ ಇದೆ. ಇದಕ್ಕೆ ಸ್ವಯಂ ಪ್ರೇರಿತ ಲಾಕ್ಡೌನ್ ಒಂದೇ ಪರಿಹಾರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ನಿವಾಸಿಗಳೇ, ನೀವು COVID-19 ನಿಂದ ಪಾರಾಗಲು ಈಗ ಉಳಿದಿರುವುದು ಒಂದೇ ದಾರಿ. ಮನೆಯಲ್ಲೇ ಉಳಿದು ನೀವೇ ಸ್ವಯಂ ಘೋಷಿತ ಬಂದ್ ಆಚರಿಸಿ. ಪ್ರಾಣಕ್ಕಿಂತಲೂ ಹಣ ಮುಖ್ಯವಲ್ಲ. ಜೀವ ಇದ್ದರೆ ಹೇಗಾದರೂ ಬದುಕಬಹುದು. ನಿಮ್ಮ ಜೀವ ಜೀವನ ಈಗ ನಿಮ್ಮ ಕೈಯಲ್ಲಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಕೂಡ ಇದನ್ನೇ ಪರೋಕ್ಷವಾಗಿ ಹೇಳುತ್ತಿದೆ. ಕೊರೋನಾ ವೈರಸ್ ಸಮೂಹ ಪ್ರಸರಣದ ಈಗಿನ ಸ್ಥಿತಿಯಲ್ಲಿ ಮನೆಯಲ್ಲಿರುವುದೇ 'ಮನೆ ಮದ್ದು'. ಈ ಸೋಂಕಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರ ನಿಗದಿಪಡಿಸಿರುವುದು ದಿನಕ್ಕೆ ₹10-15 ಸಾವಿರ. ಈ ದರ ಬಡವರಿಗಿರಲಿ, ಮೇಲ್ಮಧ್ಯಮ ವರ್ಗದವರಿಗೂ ಭರಿಸಲು ಸಾಧ್ಯವಾಗದು.
ಒಂದು ಕುಟುಂಬದ ನಾಲ್ಕು ಜನರಿಗೆ ಕೊರೊನಾ ಬಂದರೆ ಖಾಸಗಿ ಆಸ್ಪತ್ರೆಯಲ್ಲಿ 15 ದಿನಗಳ ಚಿಕಿತ್ಸೆಗೆ ಸರ್ಕಾರ ನಿಗದಿಪಡಿಸಿರುವ ದರದ ಪ್ರಕಾರ ₹5-6 ಲಕ್ಷ ಬೇಕು. ಬಡವರು ಮಧ್ಯಮವರ್ಗದವರು ಎಲ್ಲಿಂದ ತರುತ್ತಾರೆ? ಸರ್ಕಾರ ಕೈಚೆಲ್ಲಿ ಕುಳಿತಿರುವಾಗ ನಮ್ಮ ಜೀವ ನಾವೇ ಉಳಿಸಿಕೊಳ್ಳಬೇಕು. ದಯಮಾಡಿ ಎಚ್ಚರದಿಂದಿರಿ ಇದು ರಾಜ್ಯದ ಜನತೆಗೆ ನನ್ನ ಕಳಕಳಿಯ ಮನವಿ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.