ADVERTISEMENT

‘ಕೊರೊನಾ ಕರ್ಫ್ಯೂ’; ತುರ್ತು ಚಟುವಟಿಕೆಗಷ್ಟೆ ಅವಕಾಶ: ರಾಜ್ಯ ಸರ್ಕಾರದ ಆದೇಶ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 11:05 IST
Last Updated 9 ಏಪ್ರಿಲ್ 2021, 11:05 IST
ರಾತ್ರಿ ಕರ್ಫ್ಯೂ–ಸಾಂದರ್ಭಿಕ ಚಿತ್ರ
ರಾತ್ರಿ ಕರ್ಫ್ಯೂ–ಸಾಂದರ್ಭಿಕ ಚಿತ್ರ   

ಬೆಂಗಳೂರು: ಇದೇ ಶನಿವಾರದಿಂದ (ಏ. 10) ಏ. 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಪ್ಯೂ) ವಿಧಿಸಲಾಗುವ ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಯನ್ನು ರಾಜ್ಯ ಸರ್ಕಾರ ನಿರ್ಬಂಧಿಸಿದೆ.

ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ– ಮಣಿಪಾಲ, ಬೀದರ್‌, ಕಲಬುರ್ಗಿ, ಮತ್ತು ತಮಕೂರು ನಗರಗಳಲ್ಲಿ ರಾತ್ರಿ ಕರ್ಪ್ಯೂ ಜಾರಿಯಲ್ಲಿ ಇರಲಿದೆ.

‘ಕೊರೊನಾ ಕರ್ಪ್ಯೂ’ ಅವಧಿಯಲ್ಲಿ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಆದರೆ, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ ಆಧಾರದ ಮೇಲೆ ಆಟೊ, ಕ್ಯಾಬ್‌ ಮತ್ತಿತರ ವಾಹನದ ಮೂಲಕ ಸಂಚರಿಸಬಹುದು.

ADVERTISEMENT

ವಿವಿಧ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚರಿಸಲು ಅನುಮತಿ ನೀಡಲಾಗಿದೆ. ಜೊತೆಗೆ, ಅತ್ಯಾವಶ್ಯಕ ಸೇವೆಗಳನ್ನು ಒದಗಿಸುವ ಹಾಗೂ ಸರಕು ಸಾಗಣೆ ವಾಹನಗಳು, ಹೋಮ್‌ ಡೆಲಿವರಿ, ಇ– ಕಾಮರ್ಸ್‌ ಮತ್ತು ಖಾಲಿ ವಾಹನಗಳ ಸಂಚಾರಕ್ಕೂ ಮಾತ್ರ ಅನುಮತಿ ನೀಡಲಾಗಿದೆ.

ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವದ ಎಲ್ಲ ಕಾರ್ಖಾನೆಗಳು, ಕಂಪನಿಗಳು ಹಾಗೂ ಸಂಸ್ಥೆಗಳು ಯಾಥಾರೀತಿಯಲ್ಲಿ ಕಾರ್ಯ ನಿರ್ವಹಿಸಲು ಅನಮತಿ ನೀಡಲಾಗಿದೆ. ಆದರೆ, ಸಂಬಂಧಿಸಿದ ಕಾರ್ಮಿಕರು, ನೌಕರರು ಕೊರೊನಾ ಕರ್ಪ್ಯೂ ಅವಧಿಗೆ ಮೊದಲೇ ಕರ್ತವ್ಯಕ್ಕೆ ಹಾಜರಿರಬೇಕು ಎಂಬ ಷರತ್ತು ವಿಧಿಸಲಾಗಿದೆ.

ಈ ಆದೇಶವನ್ನು ಬಿಬಿಎಂಪಿ, ಪೊಲೀಸ್‌ ಆಯುಕ್ತರು ಮತ್ತು ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆದೇಶ ಪಾಲನೆಯಲ್ಲಿ ಲೋಪವಾದರೆ ಅಂಥವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.