ಬೆಂಗಳೂರು: ‘ಪೆಗಾಸಸ್ ತಂತ್ರಾಂಶ ಬಳಸಿಕೊಂಡು ದೂರವಾಣಿ ಕದ್ದಾಲಿಕೆ ಹಾಗೂ ಗೂಢಚರ್ಯೆ ನಡೆಸಿದ ಆರೋಪವನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ದೂರವಾಣಿ ಕದ್ದಾಲಿಕೆ ಸಂಸ್ಕೃತಿ ಕಾಂಗ್ರೆಸ್ನದ್ದು, ಬಿಜೆಪಿಯದ್ದಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ 9,000 ದೂರವಾಣಿಗಳನ್ನು ಕದ್ದಾಲಿಕೆ ಮಾಡಲಾಗಿತ್ತು ಮತ್ತು 500 ಇ–ಮೇಲ್ ಖಾತೆಗಳ ಮೇಲೆ ನಿಗಾ ಇಡಲಾಗಿತ್ತು ಎಂದು ಆಗ ಸರ್ಕಾರವೇ ಒಪ್ಪಿಕೊಂಡಿತ್ತು. ಕಾಂಗ್ರೆಸ್ ತನ್ನ ಪಕ್ಷದ ನಾಯಕರು, ತನ್ನದೇ ಸರ್ಕಾರದ ಸಚಿವರ ದೂರವಾಣಿಗಳನ್ನೂ ಕದ್ದಾಲಿಕೆ ಮಾಡುತ್ತಿತ್ತು’ ಎಂದು ಆರೋಪಿಸಿದರು.
ಪೆಗಾಸಸ್ ತಂತ್ರಾಂಶವನ್ನು 45 ರಾಷ್ಟ್ರಗಳು ಬಳಕೆ ಮಾಡುತ್ತಿವೆ. ಆದರೆ, ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಲ್ಲಿ ಮಾತ್ರ ಆರೋಪ ಮಾಡಲಾಗುತ್ತಿದೆ. ‘ಡೇಟಾಬೇಸ್’ ಅಥವಾ ಮಾಹಿತಿ ಸೋರಿಕೆ ಆಗುತ್ತಿದ್ದರೆ ಅದನ್ನು ದೂರವಾಣಿ ಕದ್ದಾಲಿಕೆ ಎಂಬುದಾಗಿ ಬಿಂಬಿಸುವುದು ಸರಿಯಲ್ಲ ಎಂದರು.
ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಮಾತನಾಡಿ, ‘ಮತಾಂತರ ಮತ್ತು ದೇಶವಿರೋಧಿ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದ ಆರೋಪ ಎದುರಿಸುತ್ತಿರುವ ಆ್ಯಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದೆ. ಕೇಂದ್ರ ಸರ್ಕಾರ ಬಿಗಿಯಾದ ಕ್ರಮ ಕೈಗೊಂಡಿರುವುದಕ್ಕಾಗಿ ಆ ಸಂಸ್ಥೆ ಸುಳ್ಳು ಆರೋಪ ಮಾಡುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.