ಬೆಂಗಳೂರು: ಉತ್ತರ ಪ್ರದೇಶ ಮಾದರಿಯ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿ ಹೊರಡಿಸಿರುವ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆಗೆ ಸ್ವೀಕರಿಸಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಮಂಗಳವಾರ ಆದೇಶಿಸಿದೆ.
ಬೆಂಗಳೂರಿನ ಸಾಮಾಜಿಕ ಹೋರಾಟಗಾರ ಮೊಹಮ್ಮದ್ ಆರೀಫ್ ಜಮೀಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ನಿಯಮಗಳನ್ನೇ ರಚಿಸದೆ ಕಾಯ್ದೆಯ ಕೆಲವು ಅಂಶಗಳನ್ನು ಹೇಗೆ ಅನುಷ್ಠಾನಕ್ಕೆ ತರಲಾಗುತ್ತದೆ ಎಂಬುದನ್ನು ವಿವರಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ನಿರ್ದೇಶನ ನೀಡಿದೆ.
ಮೂಲಭೂತ ಹಕ್ಕುಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳು ಸೌಹಾರ್ದವಾಗಿ ಸಾಗಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಎರಡರ ನಡುವೆ ಸಂಘರ್ಷ ಉದ್ಭವಿಸಿದಾಗ ಮೂಲಭೂತ ಹಕ್ಕುಗಳೇ ಪ್ರಮುಖವಾಗುತ್ತವೆ ಎಂಬುದನ್ನೂ ಸ್ಪಷ್ಟಪಡಿಸಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯು ಸಂವಿಧಾನದ 48 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಶಂಕೆಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ. ಗೋವುಗಳ ಮಾರಾಟ, ಖರೀದಿ ಮತ್ತು ಮರು ಮಾರಾಟದ ಸಂಪೂರ್ಣ ನಿಷೇಧವು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ. ಈ ಸುಗ್ರೀವಾಜ್ಞೆಯು ಆಹಾರದ ಆಯ್ಕೆಯ ಕಾರಣಕ್ಕಾಗಿ ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತ ವರ್ಗಗಳ ಜನರನ್ನು ಕ್ರಿಮಿನಲ್ ಅಪರಾಧಿಗಳನ್ನಾಗಿ ಪರಿವರ್ತಿಸುವ ಅಪಾಯವಿದೆ. ಗೋರಕ್ಷಣೆಯ ಹೆಸರಿನಲ್ಲಿ ಗುಂಪು ಹಲ್ಲೆ, ಹತ್ಯೆಗಳಿಗೂ ಎಡೆಮಾಡುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.
‘ನಿಯಮಗಳನ್ನು ರಚಿಸದೇ ಸುಗ್ರೀವಾಜ್ಞೆ ಜಾರಿ ಮಾಡಿರುವುದರಿಂದ ಹಸು ಸಾಕಣೆ ಮಾಡುವ ರೈತರನ್ನೂ ಶಂಕೆಯ ಮೇಲೆ ಬಂಧಿಸಲು ಅವಕಾಶ ನೀಡಿದಂತಾಗಿದೆ. ಕೃಷಿ ಉದ್ದೇಶಕ್ಕೆ ಹಸು ಹೊಂದಿರುವವರೂ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದ ನ್ಯಾಯಪೀಠ, ಫೆಬ್ರುವರಿ 17ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶನ ನೀಡಿತು. ನಿಯಮಗಳ ರಚನೆಗೆ ಸಂಬಂಧಿಸಿದಂತೆ ಫೆ.18ರಂದು ವಿಚಾರಣೆ ನಡೆಯಲಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.