ಬೆಂಗಳೂರು: ‘ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಉತ್ಸವ ಆಯೋಜಿಸುವುದರಿಂದ ಸ್ಥಳೀಯ ಪಿಲಿಕುಳ ಜೈವಿಕ ಉದ್ಯಾನದ ಪ್ರಾಣಿಗಳಿಗೆ ಏನಾದರೂ ತೊಂದರೆ ಉಂಟಾಗಲಿದೆಯೇ ಎಂಬ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಾಲ್ವರು ಸದಸ್ಯರ ತಾಂತ್ರಿಕ ಸಮಿತಿ ರಚಿಸಿದ್ದಾರೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
‘ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಪ್ರಾಣಿ ಸಂಗ್ರಹಾಲಯದ ಸಮೀಪ ಉದ್ದೇಶಿತ ಕಂಬಳ ಓಟ ಸ್ಪರ್ಧೆಯನ್ನು ಆಕ್ಷೇಪಿಸಿ, ‘ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್’ (ಪೆಟಾ) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಪಿಲಿಕುಳದ ಜೈವಿಕ ಉದ್ಯಾನವನದಲ್ಲಿ ಕಂಬಳ ಆಯೋಜನೆಯಿಂದ ಅಲ್ಲಿನ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ನಾಲ್ವರ ತಜ್ಞರ ಸಮಿತಿ ರಚಿಸಲಾಗಿದೆ’ ಎಂದರು.
‘ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯದ ಉಪ ನಿರ್ದೇಶಕಿ ಸಿ.ವಿ.ದೀಪಾ, ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮಂಗಳೂರು ಉಪ ನಿರ್ದೇಶಕ ಡಾ.ಅರುಣಕುಮಾರ್ ಶೆಟ್ಟಿ, ಎನ್ಐಟಿಕೆ ಸುರತ್ಕಲ್ನ ಪ್ರಾಧ್ಯಾಪಕ ಶ್ರೀನಿಕೇತನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರಿನ ಪರಿಸರ ಅಧಿಕಾರಿ ಲಕ್ಷ್ಮೀಕಾಂತ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಇದೇ 15ರಂದು ಆದೇಶ ಹೊರಡಿಸಿದ್ದಾರೆ’ ಎಂದು ವಿವರಿಸಿದರು.
‘ಈ ಸಮಿತಿಯು ಪಿಲಿಕುಳ ಕಂಬಳ ಉತ್ಸವ ನಡೆಸುವ ಸ್ಥಳ ಮತ್ತು ಪಿಲಿಕುಳ ಜೈವಿಕ ಉದ್ಯಾನವನ ಪರಿಶೀಲಿಸಿ, ಪಿಲಿಕುಳದಲ್ಲಿ ಕಂಬಳ ಉತ್ಸವ ನಡೆಸುವುದರಿಂದ ಅಲ್ಲಿನ ಜೈವಿಕ ಉದ್ಯಾನವವದ ಪ್ರಾಣಿಗಳ ಮೇಲೆ ಏನಾದರೂ ವ್ಯತಿರಿಕ್ತ ಪ್ರಭಾವ ಉಂಟಾಗುತ್ತದೆಯೇ ಎಂಬ ಬಗ್ಗೆ ತಾಂತ್ರಿಕ ಅಧ್ಯಯನ ನಡೆಸಿ ಎರಡು ವಾರದೊಳಗೆ ವರದಿ ಸಲ್ಲಿಸಲಿದೆ. ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿತು. ಇದೇ ವೇಳೆ ಅರ್ಜಿಯಲ್ಲಿ ಹೊಸದಾಗಿ ಪ್ರತಿವಾದಿಗಳನ್ನಾಗಿ ಸೇರ್ಪಡೆ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.