ಹುಬ್ಬಳ್ಳಿ: ಪ್ಲಾಸ್ಟಿಕ್ ಮುಕ್ತಗೊಳಿಸುವುದಕ್ಕೆ ಸಂಬಂಧಿಸಿದ ಕಾರ್ಯಕ್ರಮ ಆಯೋಜನೆ ವಿಷಯವನ್ನು
ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಜಿಲ್ಲಾಧಿಕಾರಿ ದೀಪಾ ಚೋಳನ್
ಹಾಗೂ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರನ್ನು ತರಾಟೆಗೆ ತೆಗೆದುಕೊಂಡರು.
ಲ್ಯಾಮಿಂಗ್ಟನ್ ಶಾಲೆಯಲ್ಲಿ ಪ್ಲಾಸ್ಟಿಕ್ ಸಂಗ್ರಹಣಾ ಬೃಹತ್ ಅಭಿಯಾನ ಕಾರ್ಯಕ್ರಮದ ವೇದಿಕೆ ಮೇಲೆಯೇ ಇಬ್ಬರೂ ಅಧಿಕಾರಿಗಳ ವಿರುದ್ಧ ಅವರು ರೇಗಾಡಿದರು. ಈ ಸಂದರ್ಭದಲ್ಲಿ ಸಚಿವ ಜಗದೀಶ ಶೆಟ್ಟರ್ ಇದ್ದರು.
‘ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕಾರ್ಯಕ್ರಮ. ಅದನ್ನು ವಿಶಿಷ್ಟವಾಗಿ ಆಯೋಜಿಸಬೇಕು. ಈ ಬಗ್ಗೆ ಸಭೆ ಆಯೋಜಿಸಿ, ನಾನೂ ಬರುತ್ತೇನೆ ಎಂದಿದ್ದೆ. ನಂತರ ಸಭೆ ನಿಗದಿ ಮಾಡಲೇ ಇಲ್ಲ. ಆಗಲೇ ಕಾರ್ಯಕ್ರಮಕ್ಕೆ ಕರೆಯುತ್ತಿದ್ದೀರಿ’ ಎಂದು ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.
ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸಲು ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೂ ಇದೇ ಸಂದರ್ಭದಲ್ಲಿ ಇಟ್ನಾಳ ಆಹ್ವಾನಿಸಿದರು. ಇದರಿಂದ ಸಿಟ್ಟಿಗೆದ್ದ ಅವರು ‘ಕಾರ್ಯಕ್ರಮ ಆಯೋಜನೆ ವಿಷಯವನ್ನೇ ಸರಿಯಾಗಿ ತಿಳಿಸುವುದಿಲ್ಲ. ಹಾಗಾಗಿ, ಬರುವುದಿಲ್ಲ’ ಎಂದು ಅತ್ತ ಹೋಗಲೇ ಇಲ್ಲ. ಘಟನೆಯಿಂದ ಜಿಲ್ಲಾಧಿಕಾರಿ ದೀಪಾ ಮುಜುಗರಕ್ಕೆ ಒಳಗಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.