ಬೆಂಗಳೂರು: ರಾಜ್ಯದ ಎಲ್ಲ ಮಕ್ಕಳಿಗೂ ಸೂಕ್ತ ಆಟದ ಮೈದಾನ ದೊರಕಿಸಲು ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಕಾರ ಕೋರಲಾಗಿದೆ ಎಂದು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದರು.
ಕ್ರೀಡಾ ಚಟುವಟಿಕೆಗಳಿಗೆ ಗ್ರಾಮ, ಹೋಬಳಿ, ತಾಲ್ಲೂಕುಮಟ್ಟದಲ್ಲಿ ಸರ್ಕಾರಿ ಭೂಮಿ ಗುರುತಿಸಲು ಮನವಿ ಮಾಡಲಾಗಿದೆ. ಇಲಾಖೆ ಹೋಬಳಿಮಟ್ಟದಲ್ಲಿ ಲಭ್ಯವಿರುವ ಸರ್ಕಾರಿ ಜಮೀನಿನ ಪಟ್ಟಿ ನೀಡಿದೆ. ಮೈದಾನ ನಿಗದಿಪಡಿಸಿದ ನಂತರ ಕ್ರೀಡಾ ಚಟುವಟಿಕೆಗಳಿಗೆ ಬಳಸಲಾಗುವುದು. ಇಲಾಖೆ ಅಧಿಕಾರಿಗಳು ನಿರ್ವಹಣೆ ಮಾಡುವರು. ಈ ಉದ್ದೇಶಕ್ಕೆ ₹ 100 ಕೋಟಿ ಮೀಸಲಿಡಲಾಗಿದೆ ಎಂದರು.
‘ಒಂದು ಜಿಲ್ಲೆ, ಒಂದು ಕ್ರೀಡೆ’ ಯೋಜನೆ ಅಡಿ ಆಯಾ ಜಿಲ್ಲೆಗಳ ವ್ಯಾಪ್ತಿಯ ಸ್ಥಳೀಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಕ್ರೀಡಾ ಇಲಾಖೆಯಲ್ಲಿ ಕೊರತೆ ಇರುವ ಕ್ರೀಡಾ ತರಬೇತುದಾರರ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
29ರಂದು ಕ್ರೀಡಾ ದಿನಾಚರಣೆ:
ಧ್ಯಾನ್ಚಂದ್ ಅವರ ಜನ್ಮದಿನದ ಅಂಗವಾಗಿ ಆ.29ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುವುದು. ‘ಎಲ್ಲರನ್ನೂ ಒಳಗೊಳ್ಳುವ ಸದೃಢ ಸಮಾಜ ನಿರ್ಮಾಣ’ದ ಅಶಯದಲ್ಲಿ ಕ್ರೀಡಾ ದಿನ ಆಚರಿಸಲಾಗುತ್ತಿದೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ 30 ಕ್ರೀಡೆಗಳನ್ನು ನಡೆಸಲಾಗುವುದು. ಸುಮಾರು 8 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಅಂದು ಎಲ್ಲ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳ ದೈಹಿಕ ಶಿಕ್ಷಕರನ್ನು ಸನ್ಮಾನಿಸಲಾಗುವುದು. ಈ ಸಂಪ್ರದಾಯವನ್ನು ಪ್ರತಿ ವರ್ಷವೂ ಮುಂದುವರಿಸಲು ನಿರ್ಧರಿಸಲಾಗಿದೆ ಎಂದರು.
ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಆಯುಕ್ತ ಶಶಿಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.