
ನವದೆಹಲಿ: ದುಬೈನಲ್ಲಿ ನೆಲೆಸಿರುವ ಭಾರತೀಯ ಅನಿವಾಸಿಗಳು, ಸುಂದರವಾದ ಕನ್ನಡ ಭಾಷೆಯನ್ನು ಜನಪ್ರಿಯಗೊಳಿಸಲು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ದುಬೈ ಕನ್ನಡಿಗರ ಭಾಷಾ ಪ್ರೇಮವನ್ನು ಕೊಂಡಾಡಿದ್ದಾರೆ.
ದುಬೈನಲ್ಲಿ ವಾಸಿಸುತ್ತಿರುವ ಕನ್ನಡಿಗರು ತಮ್ಮಲ್ಲಿಯೇ ಒಂದು ಪ್ರಶ್ನೆಯನ್ನು ಕೇಳಿಕೊಂಡರು. ನಮ್ಮ ಮಕ್ಕಳು ತಂತ್ರಜ್ಞಾನದ ಜಗತ್ತಿನಲ್ಲಿ ಬೆಳೆಯುತ್ತಿದ್ದಾರೆ. ಆದರೆ ಅವರು ತಮ್ಮ ನೆಲದ ಭಾಷೆಯಿಂದ ದೂರವಾಗುತ್ತಿದ್ದಾರೆಯೇ ಎಂದು ಆಲೋಚಿಸಿದ್ದಾರೆ. ಆ ಆಲೋಚನೆಯಿಂದ ಹುಟ್ಟಿದ್ದೇ 'ಕನ್ನಡ' ಪಾಠ ಶಾಲೆ.
ಈ ಕನ್ನಡ ಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಓದು, ಬರಹ ಹಾಗೂ ಮಾತನಾಡುವುದನ್ನು ಕಲಿಸಲಾಗುತ್ತಿದೆ. ಸುಮಾರು ಒಂದು ಸಾವಿರ ಮಕ್ಕಳಿಗೆ ಕನ್ನಡ ಭಾಷೆಯನ್ನು ಕಲಿಸುವ ಕೆಲಸವಾಗುತ್ತಿದೆ. ಈ ಮೂಲಕ ದುಬೈನಲ್ಲಿ ಇರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ. 'ಕನ್ನಡ ನಾಡು–ನುಡಿ, ನಮ್ಮ ಹೆಮ್ಮೆ' ಎಂದು ಪ್ರಧಾನಿ ಹೇಳಿದ್ದಾರೆ.
ಮಾಸಿಕ ರೇಡಿಯೊ ಕಾರ್ಯಕ್ರಮ 'ಮನ್ ಕಿ ಬಾತ್'ನ 129ನೇ ಸಂಚಿಕೆ ಇಂದು(ಭಾನುವಾರ) ದೇಶದಾದ್ಯಂತ ಪ್ರಸಾರವಾಯಿತು. ಇದು ಈ(2025) ವರ್ಷದ ಕೊನೆಯ ಸಂಚಿಕೆ ಆಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 2025ನೇ ಸಾಲಿನಲ್ಲಿ ಭಾರತ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಳನ್ನೂ ಸ್ಮರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.