ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಫೆ. 6) ಮತ್ತೊಮ್ಮೆ ಭೇಟಿ ನೀಡಲಿದ್ದು, ಎರಡು ಮಹತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಬೆಳಿಗ್ಗೆ 11.30ಕ್ಕೆ ‘ಭಾರತ ಇಂಧನ ಸಪ್ತಾಹ–2023’ಕ್ಕೆ (ಐಇಡಬ್ಲ್ಯೂ) ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 3ಕ್ಕೆ ತುಮಕೂರಿನಲ್ಲಿ ಎಚ್ಎಎಲ್ ಹೆಲಿಕಾಪ್ಟರ್ ಕಾರ್ಖಾನೆಯನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಫೆ.6ರಿಂದ 8ರವರೆಗೆ ಇಂಧನ ಸಪ್ತಾಹ ಆಯೋಜಿಸಲಾಗಿದ್ದು, ಭಾರತವು ಇಂಧನ ಪರಿವರ್ತನೆಯ ಶಕ್ತಿ ಕೇಂದ್ರವಾಗುತ್ತಿರುವುದನ್ನು ಅನಾವರಣಗೊಳಿಸಲಿದೆ. ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ಇಂಧನ ಕೈಗಾರಿಕೆ ವಲಯ, ಸರ್ಕಾರಗಳು ಮತ್ತು ಶೈಕ್ಷಣಿಕ ವಲಯವನ್ನು ಇದು ಒಂದೇ ವೇದಿಕೆ ಅಡಿಯಲ್ಲಿ ತರಲಿದೆ. 30 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು, 500ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು ಭಾರತದ ಇಂಧನ ಭವಿಷ್ಯ ಕುರಿತ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಚರ್ಚಿಸುವರು. ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಜಾಗತಿಕ ತೈಲ ಮತ್ತು ಅನಿಲ ವಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ದುಂಡು ಮೇಜಿನ ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಧಾನಿ ಅವರು ಭಾರತೀಯ ತೈಲ ನಿಗಮದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ‘ಕುಕ್ ಟಾಪ್’ ಮಾದರಿಯನ್ನು ಲೋಕಾರ್ಪಣೆ ಮಾಡುವರು ಮತ್ತು ವಾಣಿಜ್ಯ ಚಟುವಟಿಕೆಗೆ ಚಾಲನೆ ನೀಡಲಿದ್ದಾರೆ. ಜತೆಗೆ, ಹಸಿರು ಇಂಧನ ಕುರಿತು ಅರಿವು ಮೂಡಿಸಲು ಹಸಿರು ಸಾರಿಗೆ ಜಾಥಾಗೆ ಚಾಲನೆ ನೀಡಲಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.