ಬೆಂಗಳೂರು: ‘ಪೋಕ್ಸೊ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ವಿಚಾರಣಾ ಮ್ಯಾಜಿಸ್ಟ್ರೇಟ್ ಮುಂದೆ ಸಂತ್ರಸ್ತೆ ಹಾಗೂ ಫಿರ್ಯಾದುದಾರರು ನೀಡಲಾದ ಹೇಳಿಕೆಯನ್ನು ಲಗತ್ತಿಸಿಲ್ಲ ಮತ್ತು ವೈದ್ಯಕೀಯ ವರದಿಯನ್ನು ಸಲ್ಲಿಸಿಲ್ಲ. ಇದು ಕುರುಡನೊಬ್ಬ ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕಿದಂತಾಗಿದೆ’ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲರು ಹೈಕೋರ್ಟ್ಗೆ ಅರುಹಿದರು.
ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರ ವಿಚಾರಣೆ ನಡೆಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ದಿನದ ಕಲಾಪ ಅಂತ್ಯವಾಗುತ್ತಿದ್ದ ಕಾರಣಕ್ಕೆ, ‘ಬೇರೆ ಪ್ರಕರಣಗಳಿಗೆ ಅನುವು ಮಾಡಿಕೊಡುವ ಉದ್ದೇಶದಿಂದ ಈ ಪ್ರಕರಣದ ವಿಚಾರಣೆಯನ್ನು ಇದೇ 12ರ ಮಧ್ಯಾಹ್ನ 3.30ಕ್ಕೆ ನಡೆಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.