ADVERTISEMENT

ಪೋಕ್ಸೊ ಅಪರಾಧಿ ಶಿಕ್ಷೆ ರದ್ದು

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 15:32 IST
Last Updated 11 ನವೆಂಬರ್ 2025, 15:32 IST
ಹೈಕೋರ್ಟ್‌
ಹೈಕೋರ್ಟ್‌   

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಪೋಕ್ಸೊ ಕಾಯ್ದೆ ಅಡಿಯಲ್ಲಿ ರೂಪಿಸಲಾಗಿರುವ ನ್ಯಾಯಯುತ ವಿಚಾರಣೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ‍ಪ್ರಕರಣವೊಂದರಲ್ಲಿ ನಿಷ್ಕರ್ಷಿರುವ ಹೈಕೋರ್ಟ್, ಪೋಕ್ಸೊ ಅಪರಾಧಿಯೊಬ್ಬರಿಗೆ ಸೆಷನ್ಸ್‌ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದೆ.

‘ಸಿಟಿ ಸಿವಿಲ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ (ಎಫ್‌ಟಿಎಸ್‌ಸಿ–I) ನನಗೆ ವಿಧಿಸಿರುವ ಶಿಕ್ಷೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿ 50 ವರ್ಷದ ಅಪರಾಧಿಯೊಬ್ಬರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ್‌ ಅವರಿದ್ದ ಏಕದಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ADVERTISEMENT

ಮೇಲ್ಮನವಿದಾರರ ಪರ ಹೈಕೋರ್ಟ್‌ ವಕೀಲ ಅಭಿಷೇಕ್ ಆರ್‌.ಹುದ್ದಾರ ಅವರ ವಾದ ಮನ್ನಿಸಿರುವ ನ್ಯಾಯಪೀಠ, ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಿದೆ.

‘ಪ್ರತಿವಾದಿಯಿಂದ ಪರೀಕ್ಷಿಸದೆ ಬಿಟ್ಟಿರುವ ಎಲ್ಲಾ ಪ್ರಮುಖ ಸಾಕ್ಷಿಗಳನ್ನು ಪಾಟಿ ಸವಾಲಿಗೆ ಒಳಪಡಿಸಿ ನ್ಯಾಯಿಕ ಪ್ರಕ್ರಿಯೆ ಮುಂದುವರಿಸಬೇಕು. ಒಂದು ವೇಳೆ ಆರೋಪಿ ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವಿಷಯವನ್ನು ಅರುಹಬೇಕು’ ಎಂದು ನಿರ್ದೇಶಿಸಿದೆ.

ಮೇಲ್ಮನವಿದಾರನು ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಕಾಯ್ದೆಯ ಕಲಂ 4(2), 5(ಎಂ), 6 ಮತ್ತು 8ರ ಅಡಿಯಲ್ಲಿ ಸೆಷನ್ಸ್‌ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ಮತ್ತು ₹2.5 ಲಕ್ಷ ದಂಡ ವಿಧಿಸಿ 2024ರ ಫೆಬ್ರುವರಿ 5ರಂದು ಆದೇಶಿಸಿತ್ತು.

Cut-off box - ಅನುದಾನ ಹಂಚಿಕೆ ತಾರತಮ್ಯ: ಸರ್ಕಾರಕ್ಕೆ ನೋಟಿಸ್‌ ‘ಶಾಸಕರಿಗೆ ಮಂಜೂರಾದ ಅನುದಾನ ಈವರೆಗೆ ಯಾಕೆ ಬಿಡುಗಡೆ ಆಗಿಲ್ಲ ಎಂಬ ಬಗ್ಗೆ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ‘ಆಡಳಿತ ಮತ್ತು ಪ್ರತಿಪಕ್ಷ ಶಾಸಕರ ನಡುವೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ’ ಎಂದು ಆಕ್ಷೇಪಿಸಿ ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್‌ ಶಾಸಕ  ಜಿ.ಕೆ. ವೆಂಕಟಶಿವಾರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ನಿರ್ದಿಷ್ಟ ಅನುದಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು 2026 ಜನವರಿ 21ಕ್ಕೆ ಮುಂದೂಡಿತು.  ಆಕ್ಷೇಪ: ‘ಶ್ರೀನಿವಾಸಪುರ ಪುರಸಭೆ ವ್ಯಾಪ್ತಿಯ ಗ್ರಾಮಗಳಿಗೆ 2019ರ ಜನವರಿ 23ರಂದು ₹5 ಕೋಟಿ ಹಾಗೂ ಪುರಸಭೆಗೆ ಹೊಸದಾಗಿ ಸೇರ್ಪಡೆಗೊಂಡ ವಾರ್ಡ್‌ಗಳ ಅಭಿವೃದ್ಧಿಗೆ ಜುಲೈ 20ರಂದು ₹10 ಕೋಟಿ ಅನುದಾನ ಮಂಜೂರು ಮಾಡಲಾಗಿತ್ತು. ಆದರೆ ಈವರೆಗೂ ಹಣ ಬಿಡುಗಡೆ ಮಾಡಿಲ್ಲ’ ಎಂಬ ಅಂಶಕ್ಕೆ ಸೀಮಿತವಾಗಿ ನ್ಯಾಯಪೀಠವು ರಾಜ್ಯ ಸರ್ಕಾರಕ್ಕೆ ಈ ನೋಟಿಸ್‌ ಜಾರಿಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.