ಬೆಂಗಳೂರು: ಪೊಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇತ್ತೀಚೆಗಷ್ಟೇ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಹೊರಡಿಸಿದ್ದ ಸುತ್ತೋಲೆ ಜಾರಿಗೆ ತಾತ್ಕಾಲಿಕ ತಡೆ ನೀಡಲಾಗಿದೆ.
ವೇತನ ಪರಿಷ್ಕರಣೆ ಕುರಿತು ಹಣಕಾಸು ಇಲಾಖೆ ಪರಿಶೀಲಿಸಿ ಹಸಿರು ನಿಶಾನೆ ತೋರುವವರೆಗೂ ಸುತ್ತೋಲೆಗೆ ತಡೆ ನೀಡಲಾಗಿದೆ. ಪೊಲೀಸರ ವೇತನ ನಿಗದಿಪಡಿಸುವಲ್ಲಿ ಕೆಲವೊಂದು ವ್ಯತ್ಯಾಸಗಳಾಗಿರುವ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಪರಿಶೀಲಿಸಲಿದೆ ಎಂದು ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ಈ ಸಂಬಂಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಮಂಗಳವಾರ ತುರ್ತು ಸಂದೇಶ ರವಾನಿಸಿರುವ ಆಡಳಿತ ವಿಭಾಗದ ಎಡಿಜಿಪಿ ಎಂ.ಎಂ. ಸಲೀಂ, ‘ಪೊಲೀಸ್ ಅಧಿಕಾರಿ/ಸಿಬ್ಬಂದಿ ವೇತನವನ್ನು ಪರಿಷ್ಕರಿಸಿ ಹೊಸ ವೇತನ ನಿಗದಿಪಡಿಸಲಾಗಿತ್ತು. ಸರ್ಕಾರ/ ಪ್ರಧಾನ ಕಚೇರಿಯಿಂದ ಆದೇಶ ನೀಡುವವರೆಗೂ ಹೊಸ ವೇತನಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬಾರದು’ ಎಂದು ಸೂಚಿಸಿದ್ದಾರೆ.
ಆದರೆ, ಈ ವಾರದೊಳಗೆ ಹಣಕಾಸು ಇಲಾಖೆ ವೇತನ ಪರಿಷ್ಕರಣೆ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಲಿದೆ. ಹೊಸ ವೇತನ ಆಗಸ್ಟ್ 1ರಿಂದಲೇ ಜಾರಿಯಾಗಲಿದೆ. ಈ ಬಗ್ಗೆ ಪೊಲೀಸರಲ್ಲಿ ಆತಂಕ ಬೇಡ ಎಂದೂ ಮೂಲಗಳು ಸ್ಪಷ್ಟಪಡಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.