(ಸಾಂದರ್ಭಿಕ ಚಿತ್ರ)
ಬೆಂಗಳೂರು: ‘ರಾಜ್ಯದಲ್ಲಿ ಹಲವು ವರ್ಷಗಳಿಂದ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಹೀಗಾಗಿ ಕಾನ್ಸ್ಟೆಬಲ್ ನೇಮಕಾತಿಯ ವಯೋಮಿತಿ ಸಡಿಲಿಕೆ ಮಾಡುವ ಕುರಿತು ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪೊಲೀಸ್ ಕಾನ್ಸ್ಟೆಬಲ್ ಹುದ್ದೆ ಆಕಾಂಕ್ಷಿಗಳು, ಎರಡರಿಂದ ಮೂರು ವರ್ಷ ವಯೋಮಿತಿ ಹೆಚ್ಚಳ ಮಾಡುವಂತೆ ಮನವಿ ಸಲ್ಲಿಸಿದ್ದರು. ವಯೋಮಿತಿ ಸಡಿಲಿಕೆ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದರು.
‘ಬೇರೆ ರಾಜ್ಯಗಳಲ್ಲಿ ವಯೋಮಿತಿ ಎಷ್ಟು ವರ್ಷವಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಲಾಗಿದೆ. ಸರ್ಕಾರಕ್ಕೆ ಪ್ರಸ್ತಾವ ಬಂದ ತಕ್ಷಣವೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಧರ್ಮಸ್ಥಳದಲ್ಲಿ ನಾಲ್ಕು ಅನುಮಾನಾಸ್ಪದ ಸಾವುಗಳಾಗಿವೆ’ ಎಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ದೂರು ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ದೂರು ತೆಗೆದುಕೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಎಸ್ಐಟಿ ಅಧಿಕಾರಿಗಳು ಪರಿಶೀಲಿಸುತ್ತಾರೆ. ಪ್ರಕರಣ ಬೇರೆ ದಿಕ್ಕಿಗೆ ಹೋಗುವಂತಹ ಪ್ರಯತ್ನ ನಡೆದರೆ, ಎಸ್ಐಟಿಯವರು ಬೇರೆ ರೀತಿಯಲ್ಲಿ ತನಿಖೆ ನಡೆಸುತ್ತಾರೆ. ಯಾರೊ ಕೊಟ್ಟ ಹೇಳಿಕೆ ಮೇಲೆ ತೀರ್ಮಾನ ಮಾಡುವುದಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.