ಬೆಂಗಳೂರು: ಪಿಎಸ್ಐ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಒಳಸುಳಿಗಳು ಹೊರಬರುತ್ತಿರುವ ಬೆನ್ನಲ್ಲೆ, ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಅಪರಾಧ ಮತ್ತು ತಾಂತ್ರಿಕ ಸೇವೆಗಳು ಘಟಕದ ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನಿಯೋಜಿಸಲಾಗಿದೆ.
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಖಚಿತವಾಗುತ್ತಿದ್ದಂತೆ ಅಮೃತ್ ಪಾಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು.
'ಅಕ್ರಮದ ಬಗ್ಗೆ ಕೆಲವು ಅಭ್ಯರ್ಥಿಗಳು ನೇರವಾಗಿ ದೂರು ನೀಡಿದ್ದರೂ ಪಾಲ್ ಅವರು ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೆ, ಇಡೀ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳೂ ಕೂಡಾ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಕೆಲವು ಅಧಿಕಾರಿಗಳ ವರ್ಗಾವಣೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ' ಎಂದು ಗೃಹ ಇಲಾಖೆಯ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.