ADVERTISEMENT

ರಾಜಕೀಯ ಷಡ್ಯಂತ್ರದಿಂದ ಆರೋಪ: ಸಚಿವ ನಾಗೇಶ್‌

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 18:41 IST
Last Updated 22 ಡಿಸೆಂಬರ್ 2020, 18:41 IST
ಎಚ್‌.ನಾಗೇಶ್‌
ಎಚ್‌.ನಾಗೇಶ್‌   

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವೂ ಇಲ್ಲ. ರಾಜಕೀಯ ಷಡ್ಯಂತ್ರದಿಂದ ತಮ್ಮ ವಿರುದ್ಧ ಆರೋಪ ಮಾಡಲಾಗಿದೆ ಎಂದು ಅಬಕಾರಿ ಸಚಿವ ಎಚ್‌. ನಾಗೇಶ್‌ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ರೀತಿ ಆರೋಪ ಮಾಡುವುದು ಅಬಕಾರಿ ಇಲಾಖೆಯಲ್ಲಿ ಅಧಿಕಾರಿಯಾಗಿರುವ ಮೋಹನ್‌ ಕುಮಾರ್‌ ಮತ್ತು ಅವರ ಕುಟುಂಬದವರ ಚಾಳಿ. ಹಿಂದೆ ಐಎಎಸ್‌ ಅಧಿಕಾರಿಗಳ ವಿರುದ್ಧ ಇದೇ ರೀತಿ ಆರೋಪ ಮಾಡಿದ್ದರು. ನಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಆರೋಪ ಮಾಡಿದ್ದಾರೆ’ ಎಂದರು.

‘ಮೋಹನ್‌ ಕುಮಾರ್‌ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಅಧಿಕಾರಿ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಅವರು, ಮಗಳ ಮೂಲಕ ಈ ರೀತಿಯ ಆರೋಪಗಳನ್ನು ಮಾಡಿಸಿದ್ದಾರೆ. ಮೋಹನ್‌ ಕುಮಾರ್‌ ಅವರ ವರ್ಗಾವಣೆಗೆ ಸಂಬಂಧಿಸಿದ ಯಾವುದೇ ಪ್ರಸ್ತಾವ ತಮ್ಮ ಎದುರು ಬಂದಿರಲಿಲ್ಲ. ಲಂಚದ ಬೇಡಿಕೆ ಇಟ್ಟಿಲ್ಲ ಎಂದು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ ಪ್ರಮಾಣ ಮಾಡುವುದಕ್ಕೆ ಸಿದ್ಧ’ ಎಂದು ಹೇಳಿದರು.

ADVERTISEMENT

ತನಿಖೆಗೆ ಆದೇಶ: ಮೋಹನ್‌ ಕುಮಾರ್‌ ಪುತ್ರಿ ಸ್ನೇಹಾ ಮಾಡಿರುವ ಆರೋಪದ ಕುರಿತು ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿರುವ ಅಧಿಕಾರಿ ಮತ್ತು ಅವರ ಕುಟುಂಬದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.