ಮಂಗಳೂರು: ಕರಾವಳಿ ಹಾಗೂ ಮಲೆನಾಡಿನಲ್ಲಿ ಕೆಲ ದಿನಗಳ ಹಿಂದೆ ನಿಷೇಧಿತ ಸ್ಯಾಟಲೈಟ್ ಫೋನ್ ಕರೆ ಸಂಪರ್ಕ ಪತ್ತೆಯಾದ ಬಳಿಕ ಉಗ್ರರ ಕೃತ್ಯದ ಸಾಧ್ಯತೆ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪಂಜಾಬ್ನ ಅಮೃತಸರದಲ್ಲಿ ತಿಂಡಿ ಡಬ್ಬದಲ್ಲಿ ಸ್ಫೋಟಕ ಪತ್ತೆಯಾದ ಘಟನೆಗೆ ಸಂಬಂಧಿಸಿ, ಆರು ಉಗ್ರರನ್ನು ಪೊಲೀಸ್ ಇಲಾಖೆ ಬಂಧಿಸಿತ್ತು. ವಿಚಾರಣೆ ವೇಳೆ ಉಗ್ರರು, ತಿಂಡಿ ಡಬ್ಬಿಯಲ್ಲಿ ಬಾಂಬ್ ಇಟ್ಟು ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಬಾಯ್ಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸಮುದ್ರ ಮಾರ್ಗದ ಮೂಲಕ ಉಗ್ರರು ನುಸುಳುವ ಸಾಧ್ಯತೆಯನ್ನು ಗಮನದಲ್ಲಿಟ್ಟು, ಕರಾವಳಿ ಜಿಲ್ಲೆ
ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆಯು ಪೊಲೀಸರು, ಕರಾವಳಿ ಕಾವಲು ಪಡೆ ಹಾಗೂ ಎಲ್ಲ ಭದ್ರತಾ ವಿಭಾಗ
ಗಳಿಗೆ ಸೂಚನೆ ನೀಡಿದೆ. ಅಲ್ಲದೆ, ಪ್ರಮುಖ ಸ್ಥಳಗಳಿಗೂ ಬಿಗಿ ಭದ್ರತೆ ಒದಗಿಸುವಂತೆ ತಿಳಿಸಿದೆ ಎನ್ನಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ, ‘ಈ ಸಂಬಂಧ ನಮಗೆ ಅಧಿಕೃತ ಮಾಹಿತಿ ಯಾವುದೇ ಬಂದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.