ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಕುರಿತು ಅಧಿಕೃತ ಪ್ರಕಟಣೆ ಇಲ್ಲದಿದ್ದರೂ, ವಿವಿಧ ಜಿಲ್ಲೆಗಳಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿವೆ.
ಬೇಸಿಗೆ ಧಗೆ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಅನಿಯಮಿತವಾಗಿ ವಿದ್ಯುತ್ ಪೂರೈಕೆ ಕಡಿತ ಮಾಡುತ್ತಿರುವುದರಿಂದ ಜನಜೀವನದ ಮೇಲೆ ಸಮಸ್ಯೆಯಾಗಿದೆ. ಗೃಹ, ವಾಣಿಜ್ಯ ಸಂಪರ್ಕಗಳ ಜೊತೆಗೆ ಕೃಷಿ ಚಟುವಟಿಕೆಗೆ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಆಗುತ್ತಿದೆ.
ಜಿಲ್ಲಾವಾರು ಮಾಹಿತಿ ಪ್ರಕಾರ, ‘ಹಗಲು ಹೊತ್ತಿನ ಜೊತೆಗೆ ರಾತ್ರಿಯ ಹೊತ್ತೂ, ಒಟ್ಟಾರೆ 4–5 ಗಂಟೆ ಅನಿಯಮಿತವಾಗಿ ವಿದ್ಯುತ್ ಕಡಿತ ಆಗುತ್ತಿದೆ. ವಿದ್ಯುತ್ ಸರಬರಾಜು ಹೊಣೆ ಹೊತ್ತಿರುವ ಎಲ್ಲ ವಿಭಾಗಗಳ ವ್ಯಾಪ್ತಿಯಲ್ಲಿ ಈ ಸಮಸ್ಯೆ ಏಕರೂಪವಾಗಿದೆ.
ಕೃಷಿ ಚಟುವಟಿಕೆಗೆ ನಿತ್ಯ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು. ಆದರೆ, ವಿವಿಧ ಜಿಲ್ಲೆಗಳ ಕೃಷಿಕರ ಪ್ರಕಾರ, ‘ಐದು ಗಂಟೆ ಕೂಡಾ ಗುಣಮಟ್ಟದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಅನೇಕ ಬಾರಿ ಟ್ರಿಪ್ ಆಗಿ ಏಕಾಏಕಿ ಸ್ಥಗಿತವಾಗುವುದು ಇದೆ’ ಎನ್ನುತ್ತಾರೆ.
‘ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ. ಆದರೆ, ದುರಸ್ತಿ ಹಾಗೂ ನಿರ್ವಹಣೆ ಕಾರಣಕ್ಕಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ’ ಎಂದು ವಿದ್ಯುತ್ ವ್ಯತ್ಯಯ ಸಮಸ್ಯೆ ಕುರಿತು ಪ್ರತ್ಯೇಕವಾಗಿ ಮಾತನಾಡಿರುವ ಜೆಸ್ಕಾಂ, ಮೆಸ್ಕಾಂ, ಸೆಸ್ಕ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.