ರಾಕೇಶ್ ಶೆಟ್ಟಿ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್ ವ್ಯಾಜ್ಯದಲ್ಲಿ, ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ.
‘2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ‘ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರು ಉಲ್ಲಂಘಿಸುವ ಮೂಲಕ ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.
‘ರಾಕೇಶ್ ಶೆಟ್ಟಿ ಮೂರು ತಿಂಗಳ ಕಾಲ ಜೈಲಿನಲ್ಲಿ ಇರಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.