ನವದೆಹಲಿ: ‘ಕರ್ನಾಟಕದಲ್ಲಿ ಸದ್ಯ ಭಿಕ್ಷುಕರಿಗೆ ನೋಟಿಸ್ ನೀಡಿಲ್ಲ. ಯುಪಿಐ ಮೂಲಕ ಭಿಕ್ಷೆ ಪಡೆದರೆ ರಾಜ್ಯ ಸರ್ಕಾರ ಅವರಿಗೂ ನಾಳೆ ನೋಟಿಸ್ ನೀಡಬಹುದು’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ದಿವಾಳಿಯಾಗಿದೆ. ಹೀಗಾಗಿ, ಸಂಪನ್ಮೂಲ ಕ್ರೋಡೀಕರಣಕ್ಕೆ ಅಧಿಕಾರಿಗಳಿಗೆ ಗುರಿ ನೀಡಲಾಗಿದೆ. ಈ ಕಾರಣಕ್ಕೆ ಅಧಿಕಾರಿಗಳು ಮನಸ್ಸಿಗೆ ಬಂದಂತೆ ಬಡವರಿಗೂ ನೋಟಿಸ್ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.
‘ತಮ್ಮ ದಿವಾಳಿತನ ಮುಚ್ಚಿ ಹಾಕಲು ಕೇಂದ್ರ ಸರ್ಕಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಬೀದಿಬದಿ ವ್ಯಾಪಾರಿಗಳು ಕರ್ನಾಟಕದಲ್ಲಿ ಮಾತ್ರ ಇರುವುದೇ? ಬೇರೆ ರಾಜ್ಯಗಳಲ್ಲೂ ಸಾಕಷ್ಟು ಸಂಖ್ಯೆಯ ವ್ಯಾಪಾರಿಗಳಿದ್ದಾರೆ. ಅಲ್ಲಿ ಏಕೆ ನೋಟಿಸ್ ನೀಡಿಲ್ಲ’ ಎಂದು ಅವರು ಪ್ರಶ್ನಿಸಿದರು.
‘ಸಿದ್ದರಾಮಯ್ಯ ಅವರು ಕೇಂದ್ರದ ಸಚಿವರನ್ನು ಭೇಟಿ ಮಾಡುವುದಿಲ್ಲ. ಕೇಂದ್ರ ಸರ್ಕಾರ ಕರೆದ ಯಾವುದೇ ಸಭೆಯಲ್ಲಿ ಭಾಗಿಯಾಗುವುದಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದೇ ಅವರಿಗೆ ಚಾಳಿಯಾಗಿದೆ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.