ಪ್ರಜ್ವಲ್ ರೇವಣ್ಣ
ಬೆಂಗಳೂರು: ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿದ್ದಾರೆ.
ಇಂದು ಎಸ್ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ ಅವರನ್ನು ಕರೆತರುವ ನಿರೀಕ್ಷೆ ಇದ್ದು ಪ್ರಜ್ವಲ್ ಪರ ವಕೀಲ ಅರುಣ್ ಅವರು ಬೆಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.
ಲೋಕಸಭಾ ಚುನಾವಣೆಯ ಮತದಾನದ ನಂತರ ದೇಶದಿಂದ ಪರಾರಿಯಾಗಿದ್ದ ಪ್ರಜ್ವಲ್, 35 ದಿನಗಳ ಬಳಿಕ ಜರ್ಮನಿಯಿಂದ ನಗರದ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ 12.50 ಗಂಟೆಗೆ ಸುಮಾರಿಗೆ ಬಂದಿಳಿದರು. ನಿಲ್ದಾಣದಲ್ಲಿ ಮೊಕ್ಕಾಂ ಹೂಡಿದ್ದ ಎಸ್ಐಟಿ ಅಧಿಕಾರಿಗಳು, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳ ಸಹಾಯದಿಂದ ಪ್ರಜ್ವಲ್ ನನ್ನು ಬಂಧಿಸಿದರು.
ಗುರುವಾರ ರಾತ್ರಿ ಸಿಐಡಿ ಕಟ್ಟಡದಲ್ಲಿರುವ ಸೆಲ್ನಲ್ಲಿ ಪ್ರಜ್ವಲ್ ಅವರನ್ನು ಇರಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಜೊತೆಗೆ, ಎಸ್ಐಟಿ ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ.
‘ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್ ಜಾರಿಯಲ್ಲಿದೆ. ಹೀಗಾಗಿ, ಪ್ರಜ್ವಲ್ ಅವರನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಕರಣದಲ್ಲಿ ಇದುವರೆಗೂ ಕಲೆಹಾಕಿರುವ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು. ಆರೋಪಿ ವಿಚಾರಣೆ ಅಗತ್ಯವಿರುವುದಾಗಿ ನ್ಯಾಯಾಲಯಕ್ಕೆ ಹೇಳಿ ಕಸ್ಟಡಿಗೆ ಪಡೆಯಲಾಗುವುದು’ ಎಂದು ಎಸ್ಐಟಿ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.