ಬೆಂಗಳೂರು: ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪ್ರಜ್ವಲ್ ಪರ ವಕೀಲ ಕೇಶವ ರೆಡ್ಡಿ, ‘ಅರ್ಜಿದಾರರು ಸಲ್ಲಿಸಿರುವ ಅರ್ಜಿ ಪೂರ್ಣ ರೂಪದಲ್ಲಿ ಇಲ್ಲ. ಹೈಕೋರ್ಟ್ ಕಚೇರಿ ನೀಡಿದ್ದ ಕಾಲಮಿತಿಯಲ್ಲಿ ಅರ್ಜಿಯಲ್ಲಿನ ಲೋಪದೋಷ ಸರಿಪಡಿಸಿಲ್ಲ. ಆದ್ದರಿಂದ ಕ್ರಮಬದ್ಧವಲ್ಲದ ಈ ಅರ್ಜಿ ವಜಾಗೊಳಿಸಬೇಕು’ ಎಂದು ಕೋರಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.
‘ಪ್ರಜ್ವಲ್ ರೇವಣ್ಣ ತಾವು ಹೊಂದಿರುವ ಆಸ್ತಿ ಕುರಿತಂತೆ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಸಂಸದರಾಗಿ ಚುನಾಯಿತರಾಗಿರುವ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.