ಬೆಂಗಳೂರು: ಬಡ್ತಿ ಮೀಸಲು ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಸಿದ್ಧಪಡಿಸಿರುವ ಮಾರ್ಗಸೂಚಿಯಲ್ಲಿ ಕೆಲವು ತಿದ್ದುಪಡಿ ಮಾಡಲು ನಿರ್ಧರಿಸಲಾಗಿದೆ.
ಮಾರ್ಗಸೂಚಿಯಲ್ಲಿರುವ ಕೆಲವು ಅಂಶಗಳಿಗೆ ರಾಜ್ಯ ಎಸ್.ಸಿ, ಎಸ್.ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿಪಿಎಆರ್ ಕಾರ್ಯದರ್ಶಿ, ಕಾನೂನು ಇಲಾಖೆ ಕಾರ್ಯದರ್ಶಿ, ಸಂಸದೀಯ ಇಲಾಖೆ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿ ಜೊತೆ ಗುರುವಾರ ಚರ್ಚೆ ನಡೆಸಿದರು.
ಮೂರು ದಿನಗಳ ಒಳಗೆ ಹೊಸ ಮಾರ್ಗಸೂಚಿ ಸಿದ್ಧಪಡಿಸಬೇಕು. ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಯಿತು.
ಬಡ್ತಿ ಮೀಸಲು ಕುರಿತಂತೆ ಬಿ.ಕೆ. ಪವಿತ್ರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 3,900ಕ್ಕೂ ಹೆಚ್ಚು ಅಧಿಕಾರಿಗಳು ಹಿಂಬಡ್ತಿಗೆ ಒಳಗಾಗಿದ್ದರು. ಅವರ ಹಿತರಕ್ಷಣೆಗಾಗಿ ಈ ಹೊಸ ಕಾಯ್ದೆ ರೂಪಿಸಲಾಗಿತ್ತು. ಈ ಪ್ರಕರಣದ ಪೂರ್ವದಲ್ಲಿ ಇದ್ದಂತೆ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ, ಅದೇ ಹುದ್ದೆಗಳಲ್ಲಿ ನೇಮಿಸಬೇಕು ಎಂದು ಸಮನ್ವಯ ಸಮಿತಿ ಆಗ್ರಹಿಸಿದೆ.
ಹೊಸ ಆದೇಶ ಹೊರಡಿಸುವವರೆಗೆ ಯಾರಿಗೂ ಹಿಂಬಡ್ತಿ, ಮುಂಬಡ್ತಿ ನೀಡದೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಸರ್ಕಾರ 2018ರ ಆ. 3ರಂದು ಆದೇಶ ಹೊರಡಿಸಿತ್ತು. ಹೊಸ ಜ್ಯೇಷ್ಠತಾ ಪಟ್ಟಿ ಸಿದ್ಧಗೊಳ್ಳುವರೆಗೆ ಆ ಆದೇಶ ಹಿಂತೆಗೆದುಕೊಳ್ಳಬಾರದು ಎಂದೂ ಸಮಿತಿ ಸದಸ್ಯರು ಒತ್ತಾಯಿಸಿದರು.
ಸಮನ್ವಯ ಸಮತಿಯ ಕಾನೂನು ಸಲಹೆಗಾರ ಡಿ. ಚಂದ್ರಶೇಖರಯ್ಯ ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.