ಶಿವಮೊಗ್ಗ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆರ್ಯ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ’ ಎಂದು ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಭವಿಷ್ಯ ನುಡಿದರು.
‘ರಾಜ್ಯದಲ್ಲಿ ಏಳು ಜನ ಈಡಿಗ ಸಮುದಾಯದ ಶಾಸಕರಿದ್ದರೂ ಕೇವಲ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ನಾಮಕಾವಸ್ಥೆ ಸಚಿವ ಸ್ಥಾನ ನೀಡಲಾಗಿದೆ. ನಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ರಾಜ್ಯದಲ್ಲಿ ಈಡಿಗ ಸಮುದಾಯಕ್ಕೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಅನ್ಯಾಯವಾಗಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
‘ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದೇ ಹೋದರೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತೆ. ಮುಂದಿನ ಚುನಾವಣೆಯಲ್ಲಿ ಸಮುದಾಯದವರೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ನಾನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ’ ಎಂದು ಭವಿಷ್ಯ ನುಡಿದರು.
‘ಹಿಂದುತ್ವ ಬಿಜೆಪಿ, ಆರ್ಎಸ್ಎಸ್ ಅವರದ್ದು ಮಾತ್ರವಲ್ಲ. ಜೀವನ ಪದ್ಧತಿಯೇ ಹಿಂದುತ್ವ’ ಎಂದ ಅವರು, ಸರ್ಕಾರ ಕೂಡಲೇ ಆರ್ಯ ಈಡಿಗ ನಿಗಮ ಮಂಡಳಿ ಸ್ಥಾಪಿಸುವ ಮೂಲಕ ಹಿಂದುಳಿದ ಸಮುದಾಯಕ್ಕೆ ಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.