ADVERTISEMENT

‘ಜನಾಭಿಪ್ರಾಯ ಬದಲು–ಕಾರ್ಯತಂತ್ರ ಅಗತ್ಯ’: ಪ್ರಶಾಂತ ಭೂಷಣ್

ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ ಭೂಷಣ್

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 20:00 IST
Last Updated 12 ಮಾರ್ಚ್ 2022, 20:00 IST
ನಗರದಲ್ಲಿ ಶನಿವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಮಾತನಾಡಿದರು. ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜನಾಂದೋಲನ ಮಹಾಮೈತ್ರಿ ಜಾಥಾ ಸಂಚಾಲಕ ಎಸ್‌.ಆರ್. ಹಿರೇಮಠ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್ ದಾಸ್ ಇದ್ದರು - –ಪ್ರಜಾವಾಣಿ ಚಿತ್ರ
ನಗರದಲ್ಲಿ ಶನಿವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಮಾತನಾಡಿದರು. ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜನಾಂದೋಲನ ಮಹಾಮೈತ್ರಿ ಜಾಥಾ ಸಂಚಾಲಕ ಎಸ್‌.ಆರ್. ಹಿರೇಮಠ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್ ದಾಸ್ ಇದ್ದರು - –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಆರ್ಥಿಕತೆಯನ್ನು ನಾಶ ಮಾಡಿ, ನಿರುದ್ಯೋಗ ಹೆಚ್ಚಿಸಿರುವ ಕೇಂದ್ರ ಸರ್ಕಾರ ಸುಳ್ಳುಗಳ ಮೂಲಕವೇ ಜನರ ಮೇಲೆ ಪ್ರಭಾವ ಬೀರುತ್ತಿದೆ. ಹೀಗಾಗಿ, ಜನರ ಅಭಿಪ್ರಾಯಗಳನ್ನು ಬದಲಾಯಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ ಭೂಷಣ್ ಹೇಳಿದರು.

ಜನಾಂದೋಲನ ಮಹಾಮೈತ್ರಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾ
ಡಿದ ಅವರು, ‘ರಾಜಕೀಯ ವಿಷಯಗಳಲ್ಲಿ ನಾವು ಕ್ರಿಯಾಶೀಲರಾಗಬೇಕು. ರಾಜಕೀಯವಾಗಿ ಪ್ರಭಾವ ಬೀರಬೇಕು. ಆದರೆ, ಯಾವುದೇ ರಾಜಕೀಯ ಪಕ್ಷದ ಭಾಗವಾಗಬಾರದು ಮತ್ತು ಗುರುತಿಸಿಕೊಳ್ಳಬಾರದು’ ಎಂದು ವಿವರಿಸಿದರು.

‘ದೇಶದಲ್ಲಿ ನೂರಾರು ಸಮಸ್ಯೆಗಳಿದ್ದರೂ ಪ್ರಮುಖವಾಗಿರುವ ಅಂಶಗಳಿಗೆ ಆದ್ಯತೆ ನೀಡಬೇಕು. ನಿರುದ್ಯೋಗದಂತಹ ಪ್ರಮುಖ ವಿಷಯಗಳಿಗೆ ಆದ್ಯತೆ ನೀಡಿದರೆ ಗಮನ ಸೆಳೆಯಲು ಸಾಧ್ಯ. ಹೀಗಾಗಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭಾರತಕ್ಕೆ ಮುನ್ನೋಟ ಎನ್ನುವ ಕಲ್ಪನೆಯೊಂದಿಗೆ ಹೋರಾಟ ನಡೆಸಬೇಕಾಗಿದೆ’ ಎಂದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಷಾ ಇಡೀ ವ್ಯವಸ್ಥೆಯನ್ನೇ ತಮ್ಮ ಹಿಡಿತದಲ್ಲಿಟ್ಟುಕೊಂಡಿದ್ದಾರೆ. ಸರ್ಕಾರಿ ಆಸ್ತಿಗಳನ್ನು ನಗದೀಕರಣ ಮಾಡಲಾಗುತ್ತಿದೆ. ಖಾಸಗಿ ಕ್ಷೇತ್ರವನ್ನು ಕಡೆಗಣಿಸುವ ಅಗತ್ಯ ಇಲ್ಲ. ಆದರೆ, ಸರ್ಕಾರಿ ಸ್ವಾಮ್ಯದ ಕಂಪನಿಗಳು ಮತ್ತು ಸಂಸ್ಥೆಗಳನ್ನು ಖಾಸಗಿಯವರಿಗೆ ನೀಡುವುದಕ್ಕೆ ವಿರೋಧವಿದೆ. ಸರ್ಕಾರ ತನ್ನ ಆಪ್ತ ಬಂಡವಾಳಶಾಹಿಗಳಿಗೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಮಾರಾಟ ಮಾಡುತ್ತಿದೆ’ ಎಂದು ಟೀಕಿಸಿದರು.

‘ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳಿವೆ. ನಿರುದ್ಯೋಗಿಗಳಿಗೆ ಪರಿಹಾರ ನೀಡುವ ಕಾರ್ಯವನ್ನು ಸರ್ಕಾರ ಕೈಗೊಳ್ಳಬೇಕು. ಲಾಕ್‌ಡೌನ್‌ಗಳಿಂದ ಅನುಕೂಲಕ್ಕಿಂತ ಹಾನಿಯಾಗಿದ್ದೇ ಹೆಚ್ಚು’ ಎಂದರು.

---

15ಕ್ಕೆ ಜಾಥಾ, ಸಮಾವೇಶ

ಕೃಷಿ ಕಾಯ್ದೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಜನಾಂದೋ
ಲನ ಮಹಾಮೈತ್ರಿ ವತಿಯಿಂದ ಇದೇ 15ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯ್ದೆಯನ್ನು ಸರ್ಕಾರ ವಾಪಸ್ ಪಡೆಯುವಂತೆ ಒತ್ತಾಯಿಸಿ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ, ಸಾಗರ ತಾಲ್ಲೂಕಿನ ಕಾಗೋಡಿ
ನಿಂದ ಶಿರಾದ ಜುಂಜಪ್ಪನಗುಡ್ಡೆವರೆಗೆ, ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನ ಮಹಾಮೈತ್ರಿ ಜಾಥಾ ಸಂಚಾಲಕ ಎಸ್‌.ಆರ್. ಹಿರೇಮಠ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.