ಬೆಂಗಳೂರು: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿ, ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಪುತ್ರ ಪ್ರತೀಕ್ ಚವಾಣ್ಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ ಪ್ರತೀಕ್ ಚವಾಣ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಅವರ ವಾದ ಆಲಿಸಿದ ನ್ಯಾಯಪೀಠ, ‘ಪ್ರತೀಕ್ ಚವಾಣ್ ₹2 ಲಕ್ಷ ಮೊತ್ತದ ಬಾಂಡ್ ಮತ್ತು ಭದ್ರತೆ ಒದಗಿಸಬೇಕು. ಸಾಕ್ಷ್ಯ ನಾಶ ಮಾಡಬಾರದು‘ ಎಂಬುದೂ ಸೇರಿದಂತೆ ಸಾಂಪ್ರದಾಯಿಕ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.
‘ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ’ ಎಂದು ಪ್ರಾಸಿಕ್ಯೂಷನ್ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ. ಹೈಕೋರ್ಟ್ ವಕೀಲೆ ಮೊನಿಕಾ ಪಾಟೀಲ್, ಪ್ರತೀಕ್ ಪರ ವಕಾಲತ್ತು ವಹಿಸಿದ್ದಾರೆ.
ಆರೋಪವೇನು?
ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಅವರ ಪುತ್ರನಾದ ಪ್ರತೀಕ್ ಚವಾಣ್ ವಿರುದ್ಧ ಮಹಾರಾಷ್ಟ್ರದ ಉದಗೀರ್ ಸಮೀಪದ ಹಣೆಗಾಂವ್ ಸಮೀಪದ ತಾಂಡಾದ ಯುವತಿಯೊಬ್ಬರು ಬೀದರ್ನಲ್ಲಿ ದೂರು ನೀಡಿದ್ದಾರೆ. ‘ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಪ್ರತೀಕ್ ಅತ್ಯಾಚಾರ ಎಸಗಿ ವಂಚಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.
ಪ್ರತೀಕ್ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 376(2)(ಎನ್), 506, 366, 324ರ ಅಡಿಯಲ್ಲಿ ಬೀದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ಎಫ್ಐಆರ್ನ ಮುಂದುವರಿದ ಭಾಗವಾಗಿ ಸಂತ್ರಸ್ತೆ ನೀಡಿದ ಮತ್ತೊಂದು ದೂರಿನ ಅನುಸಾರ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲೂ ಎಫ್ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.