ಸುಳ್ಯ: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶನಿವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಎನ್ಐಎ ತಂಡವು ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಮೂವರು ಆರೋಪಿಗಳನ್ನು ಬಂಧಿಸಿತ್ತು. ಶನಿವಾರ ವಶಕ್ಕೆ ಪಡೆದಿರುವ ವ್ಯಕ್ತಿಯು ಈ ಪ್ರಕರಣದಲ್ಲಿ ಇತ್ತೀಚೆಗೆ ಬಂಧನಕ್ಕೊಳಗಾದ ಆರೋಪಿಯೊಬ್ಬರ ಹತ್ತಿರದ ಸಂಬಂಧಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರವೀಣ್ ನೆಟ್ಟಾರು ಅವರನ್ನು ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆಯನ್ನು ಬೆಳ್ಳಾರೆ ಪೊಲೀಸರು ಆರಂಭಿಸಿದ್ದರು. ಬಳಿಕ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಸುಳ್ಯ ನಿವಾಸಿ ಶಿಹಾಬ್, ಪಾಲ್ತಾಡಿ ಅಂಕತ್ತಡ್ಕದ ರಿಯಾಜ್, ಸುಳ್ಯ ಎಲಿಮಲೆಯ ಬಶೀರ್, ಸವಣೂರಿನ ಜಾಕೀರ್, ಬೆಳ್ಳಾರೆಯ ಶಫೀಕ್, ಪಳ್ಳಮಜಲು ನಿವಾಸಿ ಸದ್ದಾಂ, ಹ್ಯಾರಿಸ್, ಬೆಳ್ಳಾರೆ ಗೌರಿಹೊಳೆ ನೌಫಲ್, ನಾವೂರಿನ ಆಬಿದ್, ಜಟ್ಟಿಪಳ್ಳದ ಕಬೀರ್, ಬೆಳ್ಳಾರೆ ಕುನ್ನಾಗುಡ್ಡೆ ನಿವಾಸಿ ಬೆಳ್ಳಾರೆ ಗ್ರಾ.ಪಂ.ಸದಸ್ಯ ಕೆ.ಮಹಮ್ಮದ್ ಇಕ್ಬಾಲ್, ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಕೆ.ಇಸ್ಮಾಯಿಲ್ ಶಾಫಿ ಬೆಳ್ಳಾರೆ ಮತ್ತು ನಾವೂರು ಗಾಂಧಿನಗರ ನಿವಾಸಿ ಇಬ್ರಾಹಿಂ ಶಾ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.