ADVERTISEMENT

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಎನ್‌ಐಎಗೆ: ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 10:43 IST
Last Updated 29 ಜುಲೈ 2022, 10:43 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ವರ್ಗಾವಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ವ್ಯವಸ್ಥಿತವಾಗಿ ಸಂಚು ರೂಪಿಸಿ ಪ್ರವೀಣ್‌ ಅವರನ್ನು ಹತ್ಯೆ ಮಾಡಲಾಗಿದೆ. ಈ ಕೃತ್ಯದ ಹಿಂದಿರುವ ಜಾಲವು ಅಂತರರಾಜ್ಯ ಮಟ್ಟದಲ್ಲಿ ಸಕ್ರಿಯವಾಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ’ ಎಂದರು.

ಪ್ರಕರಣದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಸಂಪೂರ್ಣ ಮಾಹಿತಿ ಸಂಗ್ರಹಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ. ಮಾಹಿತಿ ಸಂಗ್ರಹವಾದ ಬಳಿಕ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸುವ ಕುರಿತು ಗೃಹ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿದೆ ಎಂದು ಹೇಳಿದರು.

ADVERTISEMENT

ರಾಜ್ಯದಿಂದ ಕೇರಳವನ್ನು ಸಂಪರ್ಕಿಸುವ ಅಂತರರಾಜ್ಯ ಗಡಿ ಭಾಗದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲಾಗುವುದು. ತನಿಖಾ ಠಾಣೆಗಳನ್ನೂ ತೆರೆಯಲಾಗುವುದು. ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್‌ ಕ್ಯಾಂಪ್‌ ಆರಂಭಿಸಲಾಗುವುದು. ರಾತ್ರಿ ಗಸ್ತು ಹೆಚ್ಚಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲಾಗುವುದು. ಅಲ್ಲಿಗೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ ಇನ್ನೊಂದು ತುಕಡಿಯನ್ನು ನಿಯೋಜಿಸಲಾಗುವುದು ಎಂದು ವಿವರಿಸಿದರು.

ಗುರುವಾರ ರಾತ್ರಿ ಸುರತ್ಕಲ್‌ನಲ್ಲಿ ನಡೆದ ಕೊಲೆ ಪ್ರಕರಣದ ತನಿಖೆಯನ್ನೂ ತೀವ್ರಗೊಳಿಸಲಾಗಿದೆ. ಆರೋಪಿಗಳ ಬಂಧನಕ್ಕೆ ತಂಡಗಳನ್ನು ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಎಲ್ಲ ಧರ್ಮಗಳ ಪ್ರಮುಖರ ಜತೆಗೂಡಿ ಶಾಂತಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.