ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಉತ್ತರ ಪ್ರದೇಶಮಾದರಿಯನ್ನು ಅನುಸರಿಸಬೇಕು ಎಂಬ ಮಾತುಗಳೂ ಕೇಳಿಬಂದಿವೆ. ಅಗತ್ಯ ಬಿದ್ದರೆ ಯೋಗಿ ಮಾಡೆಲ್ ಅನ್ನು ಅನುಸರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ, ‘ಉದ್ಯೋಗಗಳನ್ನು ಸೃಷ್ಟಿಸಿ, ದ್ವೇಷವನ್ನಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕದಂತಹ ಆದಾಯ ತರುವ ರಾಜ್ಯಗಳು ಉತ್ತರ ಪ್ರದೇಶದಂತಹ ರಾಜ್ಯಗಳನ್ನು ಸುಭಿಕ್ಷವಾಗಿರುವಂತೆ ನೋಡಿಕೊಳ್ಳುತ್ತಿವೆ. ಆದರೂ, ದ್ವೇಷದ ರಾಜಕಾರಣ ಉತ್ತರ ಪ್ರದೇಶವನ್ನು ಹಿಂದುಳಿಸಿದೆ. ಇತರ ರಾಜ್ಯಗಳ ಮೇಲೆ ಅವಲಂಬಿತವಾಗುವಂತೆ ಮಾಡಿದೆ. ಕರ್ನಾಟಕ ಶಾಂತಿಯುತ ಮತ್ತು ಪ್ರಗತಿಪರವಾಗಿರುವ ಕಾರಣ 2 ನೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾಗಿದೆ’ ಎಂದು ಹೇಳಿದ್ದಾರೆ.
‘ಬಿಜೆಪಿ ಸರ್ಕಾರವು ಈ ಶಾಂತಿಯನ್ನು ಹಾಳುಮಾಡುತ್ತಿದೆ. ಉತ್ತರ ಪ್ರದೇಶದ ದ್ವೇಷ ರಾಜಕಾರಣವನ್ನು ಆಮದು ಮಾಡಿಕೊಳ್ಳುತ್ತಿದೆ. ನಮ್ಮ ಪರಂಪರೆ ಮತ್ತು ಸಾಧನೆಗಳ ಬಗ್ಗೆ ನಮಗೆ ಹೆಮ್ಮೆ ಇದೆ. ನಿಮ್ಮ ಶೇ 60 ಬೆಲೆ ಏರಿಕೆ ಮತ್ತು 40 ಪರ್ಸೆಂಟ್ ಭ್ರಷ್ಟಾಚಾರವನ್ನು ನಿಲ್ಲಿಸಿ. ಉದ್ಯೋಗಗಳನ್ನು ಸೃಷ್ಟಿಸಿ, ದ್ವೇಷವನ್ನಲ್ಲ’ ಎಂದು ಕೃಷ್ಣ ಬೈರೇಗೌಡ ಟ್ವೀಟಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವರ್ಗಾವಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇವುಗಳನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.