
ಹಾವೇರಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಒಂದು ಸಾವಿರ ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರೈಸಿದ ಸಂದರ್ಭದಲ್ಲಿ ಇಲ್ಲಿ ಫೆ. 14ರಂದು ಸಾಧನಾ ಸಮಾವೇಶ ಹಮ್ಮಿಕೊಂಡಿದೆ. ಇದೇ ಸಂದರ್ಭದಲ್ಲಿ ರಾಜ್ಯದ ಲಕ್ಷ ಮಂದಿಗೆ ಭೂ ಗ್ಯಾರಂಟಿಯ ಹಕ್ಕುಪತ್ರ ವಿತರಿಸಲೂ ಕಂದಾಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಸಮಾವೇಶಕ್ಕಾಗಿ ಇಲ್ಲಿ 2.76 ಲಕ್ಷ ಚದರ ಅಡಿ ವಿಸ್ತೀರ್ಣದ ವೇದಿಕೆ ನಿರ್ಮಿಸಲಾಗಿದೆ. ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ ಹೆಸರಿನಲ್ಲಿ ಬಾಗಿಲು ನಿರ್ಮಿಸಲಾಗಿದೆ. 70 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಿದ್ದು, 1.50 ಲಕ್ಷ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.
ಹಾವೇರಿ ಜಿಲ್ಲೆಗೆ, ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳ ಜನರು ಬಂದು ಹೋಗಲು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಾಗದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸಮಾವೇಶದ ಭದ್ರತೆಗಾಗಿ ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ಮಂಗಳೂರು, ಬೆಂಗಳೂರು, ಬೆಳಗಾವಿ ಜಿಲ್ಲೆ ಪೊಲೀಸರನ್ನು ನಿಯೋಜಿಸಲಾಗಿದೆ.
‘ಸರ್ಕಾರಿ, ಖಾಸಗಿ ಜಾಗದಲ್ಲಿ ವರ್ಷಗಟ್ಟಲೇ ವಾಸವಿದ್ದು, ಮಾಲೀಕತ್ವ ಹಕ್ಕಿನಿಂದ ವಂಚಿತರಾಗಿದ್ದ ಲಕ್ಷಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ನೀಡಲು ವ್ಯವಸ್ಥೆ ಮಾಡಲಾಗಿದೆ. ಸಭಿಕರಿಗೆ ಯಾವುದೇ ತೊಂದರೆಯಾಗದಂತೆ ಸಿದ್ಧತೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.
‘ವಾಹನಗಳ ಸುಗಮ ಸಂಚಾರ ಹಾಗೂ ಭದ್ರತೆಗೆ ಆದ್ಯತೆ ನೀಡಲಾಗಿದೆ. ವಿವಿಧ ಕಡೆಗಳಲ್ಲಿ 60 ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ತಿಳಿಸಿದರು.
ಪೆಂಡಾಲ್ ಬಿದ್ದು ತಲೆಗೆ ಪೆಟ್ಟು
ಸಮಾವೇಶಕ್ಕಾಗಿ ಹಾಕಿದ್ದ ಪೆಂಡಾಲ್ ಗುರುವಾರ ಹಾಗೂ ಶುಕ್ರವಾರ ಎರಡು ಬಾರಿ ಬಿದ್ದು ಅವಘಡ ಸಂಭವಿಸಿದೆ. ಸುದ್ದಿವಾಹಿನಿಯ ಕ್ಯಾಮೆರಾಮನ್ ಮಲ್ಲೇಶ್ ಕಬ್ಬೂರು ತಲೆಗೆ ತೀವ್ರ ಪೆಟ್ಟಾಗಿದೆ. ಭದ್ರತೆಗಾಗಿ ಪೊಲೀಸರ ಹಾಜರಾತಿ ಪಡೆಯುತ್ತಿದ್ದ ಸ್ಥಳದಲ್ಲಿಯೂ ಪೆಂಡಾಲ್ ಕಬ್ಬಿಣದ ಕಂಬಗಳ ಸಮೇತ ಕಳಚಿಬಿದ್ದಿದ್ದು ಕಾನ್ಸ್ಟೆಬಲ್ವೊಬ್ಬರ ಕಾಲಿಗೆ ಸಣ್ಣ ಪೆಟ್ಟಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಪರಿಶೀಲನೆ ವೇಳೆಯೇ ಪೆಂಡಾಲ್ ಬಿದ್ದಿದೆ. ಅವೈಜ್ಞಾನಿಕವಾಗಿ ಪೆಂಡಾಲ್ ಅಳವಡಿಸಿರುವುದು ಇದಕ್ಕೆ ಕಾರಣವೆಂದು ದೂರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.