ಉಡುಪಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಉಡುಪಿಯ ಶ್ರೀಕೃಷ್ಣಮಠಕ್ಕೆ ಆಗಮಿಸಲಿದ್ದು, ಪೇಜಾವರ ಶ್ರೀಗಳು ಸನ್ಯಾಸ ಸ್ವೀಕರಿಸಿ 80 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಪೇಜಾವರ ಮಠದಲ್ಲಿ ಹಮ್ಮಿಕೊಂಡಿರುವ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿರುವ ರಾಷ್ಟ್ರಪತಿಗಳು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿ ಉಡುಪಿಯ ಹೆಲಿಪ್ಯಾಡ್ಗೆ ಬರಲಿದ್ದಾರೆ. 12ಕ್ಕೆ ಪೇಜಾವರ ಅಧೋಕ್ಷಜ ಮಠಕ್ಕೆ ಭೇಟಿ ನೀಡಿ ವಿಶ್ವೇಶತೀರ್ಥ ಶ್ರೀಗಳ ಜತೆ ಉಭಯ ಕುಶಲೋಪರಿ ನಡೆಸಿ, ಬಳಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀಗಳನ್ನು ಸನ್ಮಾನಿಸಲಿದ್ದಾರೆ.12.45ಕ್ಕೆ ಶ್ರೀಕೃಷ್ಣಮಠಕ್ಕೆ ಭೇಟಿನೀಡಿ ಕೃಷ್ಣನ ದರ್ಶನ ಪಡೆದು ಹಿಂದಿರುಗಲಿದ್ದಾರೆ.
ರಾಷ್ಟ್ರಪತಿ ಭೇಟಿ ಪ್ರಯುಕ್ತ ಶ್ರೀಕೃಷ್ಣಮಠಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಕೃಷ್ಣಮಠಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ರಥಬೀದಿಯಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಗುರುವಾರ ಮಧ್ಯಾಹ್ನ 3ಗಂಟೆಯವರೆಗೂ ಭಕ್ತರು ಶ್ರೀಕೃಷ್ಣ ಮಠ ಪ್ರವೇಶಿಸುವಂತಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.