ಯಾದಗಿರಿ: ‘ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅಯೋಗ್ಯ ಸಚಿವರೇ ಹೆಚ್ಚಿದ್ದಾರೆ’ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,‘ಸಚಿವರು ಅಧಿಕಾರ ಹೀನರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಥೇಟ್ ಖಾಸಗಿ ಕಂಪೆನಿಯಂತೆ ಕಾರ್ಯನಿರ್ವಹಿಸುತ್ತಿದ್ದರೂ ಸಚಿವರು ತುಟಿ ಬಿಚ್ಚುತ್ತಿಲ್ಲ’ ಎಂದರು.
‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವರಾದ ಎಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ರಾಜ್ಯದ ಅಧಿಕಾರ ಕೇಂದ್ರೀಕೃತವಾಗಿದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಕೇವಲ ಹಾಸನ, ರಾಮನಗರ, ತುಮಕೂರು, ಬೆಂಗಳೂರಿಗೆ ಮಾತ್ರ ಸೀಮಿತವಾಗಿದೆ. ಥೇಟ್ ಖಾಸಗಿ ಕಂಪೆನಿಯಂತೆ ಸರ್ಕಾರ ವರ್ತಿಸಲು ಸಂಪುಟದಲ್ಲಿನ ಅಯೋಗ್ಯ ಸಚಿವರೇ ಕಾರಣರಾಗಿದ್ದಾರೆ' ಎಂದು ಪುನರುಚ್ಚರಿಸಿದರು.
‘ಅನರ್ಹರನ್ನು ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುತ್ತಿದ್ದಾರೆ. ಹಾಗಾಗಿ, ರಾಜ್ಯದ ಇತರೆ ಜಿಲ್ಲೆಗಳಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ' ಎಂದು ಆಪಾದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.