ADVERTISEMENT

'ಜನತೆಗೆ ಕರ್ತವ್ಯ ಪಾಠ ಮಾಡುವ ಬದಲು ಪ್ರಧಾನಿ ಆತ್ಮಾವಲೋಕನ ಮಾಡಿಕೊಳ್ಳಬೇಕಿತ್ತು'

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2020, 15:57 IST
Last Updated 20 ಅಕ್ಟೋಬರ್ 2020, 15:57 IST
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ನರೇಂದ್ರ ಮೋದಿ ಅವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು ಎಂದಿದ್ದಾರೆ.

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷ್ಯಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು ಎಂದು ಹೇಳಿದ್ದಾರೆ.

ADVERTISEMENT

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ದೇಶದ ಜನತೆಗೆ ಕರ್ತವ್ಯ ಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ₹ 20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿಎಂ ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು ಎಂದು ಹೇಳಿದ್ದಾರೆ.

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್‌ನಲ್ಲಿ ಪ್ರಕಟಿಸಿದ್ದರು. ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು 7 ರಿಂದ 5 ಕಿಲೋಗೆ ಇಳಿಸಿದೆ. ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲು ಹೊರಟಿದೆ ಎಂದು ತಿಳಿಸಿದ್ದಾರೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ಬಂದಿದೆಯೇ? ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.