ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬುಧವಾರ ಬೆಳಿಗ್ಗೆ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರಕರಣವೊಂದರಲ್ಲಿ ಜೈಲು ಸೇರಿರುವ ಸೈಯದ್ ಅಲಿಯಾಸ್ ರಿಯಾಜ್, ಅಜ್ಮತ್ ಉಲ್ಲಾ, ಸೈಯದ್ ಸಮೀರ್, ರಿಯಾಜ್ ಹಾಗೂ ಸೈಯದ್ ಇಮ್ರಾನ್ ಗುಂಪು ಕಟ್ಟಿಕೊಂಡು, ಇನ್ನೊಬ್ಬ ಕೈದಿ ಅಮರ್ ಅಲಿಯಾಸ್ ಅಮರನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಘಟನೆ ಬಗ್ಗೆ ಕಾರಾಗೃಹದ ಮುಖ್ಯ ಅಧೀಕ್ಷಕ ವಿ. ಶೇಷಮೂರ್ತಿ ದೂರು ನೀಡಿದ್ದು, ಅದರನ್ವಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಕ್ಷುಲ್ಲಕ ಕಾರಣಕ್ಕಾಗಿ ಕೈದಿಗಳ ನಡುವೆ ಜಗಳ ಶುರುವಾಗಿ, ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆರೋಪಿಗಳು ಅಮರ್ ಕಿವಿ ಹಾಗೂ ಕತ್ತಿಗೆ ಬ್ಲೇಡ್ನಿಂದ ಇರಿದಿದ್ದರು. ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳು ಜಾಮೀನು ಮೇಲೆ ಬುಧವಾರ ಸಂಜೆಯೇ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಪಿಗಳನ್ನು ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು’ ಎಂದೂ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.