ADVERTISEMENT

48 ಕೈದಿಗಳ ಬಿಡುಗಡೆಗೆ ರಾಜ್ಯಪಾಲರ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2018, 17:58 IST
Last Updated 30 ಸೆಪ್ಟೆಂಬರ್ 2018, 17:58 IST

ಬೆಂಗಳೂರು: ಸನ್ನಡತೆ ಆಧಾರದಲ್ಲಿ ಇತ್ತೀಚೆಗಷ್ಟೇ 79 ಕೈದಿಗಳನ್ನು ಬಿಡುಗಡೆ ಮಾಡಿದ್ದ ರಾಜ್ಯ ಸರ್ಕಾರ, ಇದೀಗ ಗಾಂಧೀ ಜಯಂತಿ ಪ್ರಯುಕ್ತ ಮತ್ತೆ 48 ಕೈದಿಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ರಾಜ್ಯದ ಏಳು ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 48 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಅನುಮತಿ ಕೋರಿ ರಾಜ್ಯ ಸರ್ಕಾರ, ಇತ್ತೀಚೆಗಷ್ಟೇ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಪ್ರಸ್ತಾವ ಸಲ್ಲಿಸಿತ್ತು. ಆ ಪ್ರಸ್ತಾವಕ್ಕೆ ರಾಜ್ಯಪಾಲರು ಶನಿವಾರ ಒಪ್ಪಿಗೆ ನೀಡಿದ್ದಾರೆ.

‘ಕಳೆದ ಬಾರಿ 93 ಕೈದಿಗಳ ಬಿಡುಗಡೆಗೆ ಅನುಮತಿ ಕೋರಿ ಪ್ರಸ್ತಾವ ಸಲ್ಲಿಸಲಾಗಿತ್ತು. 79 ಕೈದಿಗಳ ಬಿಡುಗಡೆಗೆ ಮಾತ್ರ ರಾಜ್ಯಪಾಲರು ಒಪ್ಪಿಗೆ ನೀಡಿದ್ದರು. ಆದರೆ, ಈ ಬಾರಿ ನಾವು ಕಳುಹಿಸಿದ್ದ ಎಲ್ಲ ಕೈದಿಗಳ ಬಿಡುಗಡೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ’ ಎಂದು ಕಾರಾಗೃಹಗಳ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

‘ರಾಜಭವನದಿಂದ ಬಂದಿರುವ ಕಡತ, ಶನಿವಾರ ನಮ್ಮ ಕೈ ಸೇರಿದೆ. ಕೈದಿಗಳ ಬಿಡುಗಡೆಯ ದಿನಾಂಕ ನಿಗದಿಪಡಿಸುವಂತೆ ಆಯಾ ಜೈಲಿನ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

‘ಕಳೆದ ಬಾರಿ ಯಾರೊಬ್ಬ ಮಹಿಳೆಯರನ್ನು ಬಿಡುಗಡೆ ಮಾಡಿರಲಿಲ್ಲ. ಈ ಬಾರಿ ಕೆಲವು ಮಹಿಳೆಯರನ್ನು ಬಿಡುಗಡೆ ಮಾಡುತ್ತಿದ್ದು, ಅವರು ಯಾರು ಎಂಬುದು ಕಾರ್ಯಕ್ರಮದ ದಿನದಂದೇ ಗೊತ್ತಾಗಲಿದ’ ಎಂದು ಅಧಿಕಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.