
ಬೆಂಗಳೂರು: ಬಿಜೆಪಿ ನೇತೃತ್ವದ ಸರ್ಕಾರದ ಆಡಳಿತವಿದ್ದ 2020-21, 2022-23ರ ಅವಧಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ₹653.25 ಕೋಟಿ ಮೊತ್ತಕ್ಕೆ ಸಾಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ₹458.6 ಕೋಟಿ ವಸೂಲಾತಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಬಿಜೆಪಿ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಕಮಿಷನ್ ಪಿಡುಗಿನಿಂದ ಗ್ರಾಮೀಣಾಭಿವೃದ್ಧಿ ಸಚಿವರೊಬ್ಬರು ರಾಜೀನಾಮೆ ನೀಡಿದ್ದರು. ನಂತರ ಸಚಿವರಿಲ್ಲದ ಇಲಾಖೆಯ ವ್ಯವಸ್ಥೆಯನ್ನು ಹಳ್ಳ ಹಿಡಿಸಲಾಗಿತ್ತು. ಬಿಜೆಪಿ ಮಾಡಿದ್ದ ಅವಾಂತರ ಸರಿಪಡಿಸುವ ಕೆಲಸವನ್ನು ಈಗಿನ ಸರ್ಕಾರ ಮಾಡುತ್ತಿದೆ’ ಎಂದಿದ್ದಾರೆ.
‘15ನೇ ಹಣಕಾಸು ಆಯೋಗದ ಅನುದಾನದಲ್ಲಿ ಶೇ 90ರಷ್ಟು ಜನಸಂಖ್ಯೆಯ ಆಧಾರದಲ್ಲಿ, ಶೇ 10ರಷ್ಟನ್ನು ಭೌಗೋಳಿಕ ಆಧಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಾರ್ಗಸೂಚಿ ಅನ್ವಯ ಬಿಡುಗಡೆ ಮಾಡಲಾಗುತ್ತದೆ. ಒಟ್ಟು ಅನುದಾನದಲ್ಲಿ ಶೇ 60ರಷ್ಟು ನಿರ್ಬಂಧಿತ, ಶೇ 40ರಷ್ಟನ್ನು ಅನಿರ್ಬಂಧಿತ ಅನುದಾನವಾಗಿ ಬಿಡುಗಡೆ ಮಾಡಲಾಗುತ್ತದೆ. ಗ್ರಾಮ ಸಭೆ ನಡೆಸಿ, ಈ ಅನುದಾನ ಬಳಕೆಗೆ ಕ್ರಿಯಾ ಯೋಜನೆ ತಯಾರಿಸಿಕೊಂಡು ಅವರ ಹಂತದಲ್ಲೇ ಕಾಮಗಾರಿ ಮಾಡಲಾಗುತ್ತದೆ. ಕ್ರಿಯಾ ಯೋಜನೆ ಮತ್ತು ಅನುಷ್ಠಾನದ ಮಾಹಿತಿಯನ್ನು ಇ-ಗ್ರಾಮ್ ಸ್ವರಾಜ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗುತ್ತದೆ. ಸರ್ಕಾರದಿಂದ ಪ್ರತ್ಯೇಕ ಅನುಮೋದನೆ ಪಡೆಯುವ ಅಗತ್ಯ ಇಲ್ಲ. ಬಿಜೆಪಿಯ ಕೆಲವರಿಗೆ ಈ ಕುರಿತು ಸಾಮಾನ್ಯ ಜ್ಞಾನವೂ ಇಲ್ಲ’ ಎಂದು ಟೀಕಿಸಿದ್ದಾರೆ.
‘15ನೇ ಹಣಕಾಸು ಆಯೋಗದ ಅನುದಾನವನ್ನು ಬೇರೆಡೆ ವರ್ಗಾಯಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆಯಲ್ಲಿ ಯಾವುದೇ ಆಕ್ಷೇಪಣೆಗಳು ಬಂದಿಲ್ಲ. ಆರೋಪಕ್ಕೆ ಸಾಕ್ಷ್ಯಗಳೇ ಇಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.