ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ನಿಗಮಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ಚರ್ಚೆ ನಡೆಸಲು ಆಸಕ್ತಿ ತೋರದೇ ಇರುವುದನ್ನು ಪ್ರತಿಭಟಿಸಿ ವಿಧಾನಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಸಭೆಗಳಿಗೆ ಗೈರಾಗಲು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ನಿರ್ಧರಿಸಿದ್ದಾರೆ.
ಈ ಕುರಿತು ಸಮಿತಿಯ ಅಧ್ಯಕ್ಷ ಎಂ.ಪಿ. ಕುಮಾರಸ್ವಾಮಿ ಅವರಿಗೆ ಬುಧವಾರ ಪತ್ರ ಬರೆದಿರುವ ಪ್ರಿಯಾಂಕ್, ‘ಸುಳ್ಳು ಜಾತಿ ಪ್ರಮಾಣಪತ್ರಗಳು ಸೇರಿದಂತೆ ಅನೇಕ ವಿಚಾರಗಳ ಕುರಿತು ಸಮಿತಿಯ ಸಭೆಗಳಲ್ಲಿ ಚರ್ಚೆ ನಡೆಯುತ್ತಿದೆ. ಸಮಿತಿಯ ಅಧ್ಯಕ್ಷರಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಅಭಿವೃದ್ಧಿಯ ವಿಚಾರದಲ್ಲಿ ನ್ಯಾಯ ದೊರಕಿಸುತ್ತೀರಿ ಎಂಬ ನಂಬಿಕೆ ನಮ್ಮದು. ಗಂಗಾ ಕಲ್ಯಾಣ ಯೋಜನೆಯಲ್ಲಿನ ಭ್ರಷ್ಟಾಚಾರದ ಕುರಿತು ಚರ್ಚೆ ನಡೆಸುವಂತೆ ಅನೇಕ ಬಾರಿ ನಾನು ನಿಮ್ಮನ್ನು ಕೋರಿದ್ದರೂ ಚರ್ಚೆ ಆರಂಭಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಗಂಗಾ ಕಲ್ಯಾಣ ಯೋಜನೆ ಅನುಷ್ಠಾನದಲ್ಲಿ ₹ 431 ಕೋಟಿಯಷ್ಟು ಅಕ್ರಮ ನಡೆದಿರುವುದು ತನಿಖಾ ಸಮಿತಿಯ ಮಧ್ಯಂತರ ವರದಿಯಲ್ಲಿ ಉಲ್ಲೇಖವಾಗಿದೆ ಎಂಬ ಮಾಹಿತಿ ಇದೆ. ಇಂತಹ ಗಂಭೀರ ವಿಷಯದ ಕುರಿತು ಚರ್ಚಿಸಿ, ನಿರ್ಣಯ ಕೈಗೊಳ್ಳಲಾಗದ ಸಮಿತಿಯ ಸಭೆಗೆ ಹಾಜರಾಗುವುದು ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ. ಆದ್ದರಿಂದ ಇನ್ನು ಮುಂದೆ ಸಮಿತಿಯ ಸಭೆಗೆ ಹಾಜರಾಗಬಾರದೆಂದು ತೀರ್ಮಾನಿಸಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.