ADVERTISEMENT

ಛಲವಾದಿ ನಾರಾಯಣಸ್ವಾಮಿ ರಾಜೀನಾಮೆಗೆ ಪ್ರಿಯಾಂಕ್ ಖರ್ಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಮೇ 2025, 14:20 IST
Last Updated 6 ಮೇ 2025, 14:20 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಛಲವಾದಿ ನಾರಾಯಣಸ್ವಾಮಿ ಅವರು ರಾಜೀನಾಮೆ ನೀಡಿ, ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಬಿ.ಆರ್‌. ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್‌ ಎಂಬ ಛಲವಾದಿ ನಾರಾಯಣಸ್ವಾಮಿ ಆರೋಪ ನಿರಾಧಾರ. ಅಂಬೇಡ್ಕರ್‌ ಅವರು ಮಿತ್ರ ಕಮಲಕಾಂತ್‌ ಅವರಿಗೆ ಬರೆದ ಪತ್ರದಲ್ಲಿ ‘ನನ್ನ ಸೋಲಿಗೆ ಕಮ್ಯುನಿಸ್ಟ್‌ ಪಕ್ಷದ ನಾಯಕ ಡಾಂಗೆ ಮತ್ತು ಆರ್‌ಎಸ್‌ಎಸ್‌ನ ಸಾವರ್ಕರ್‌ ಕಾರಣ’ ಎಂದು ಉಲ್ಲೇಖಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಅಧಿಕೃತ ದಾಖಲೆಗಳನ್ನು ನೀಡಿದ್ದೇನೆ. ಅವರು ತಕ್ಷಣ ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.

‘ಚುನಾವಣೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿಲ್ಲ ಎನ್ನುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ ಸಾಬೀತು ಮಾಡಿದರೆ ರಾಜೀನಾಮೆ ನೀಡುವ ಜತೆಗೆ, ತಲಾ ₹1,00,001 ನೀಡುತ್ತೇನೆ’ ಎಂದು ನಾರಾಯಣಸ್ವಾಮಿ ಹೇಳಿದ್ದರು. ಆ ಹಣವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅರಿವು ಕೇಂದ್ರಕ್ಕೆ ನೀಡಿದರೆ ಪುಸ್ತಕ ಖರೀದಿಗೆ ವಿನಿಯೋಗಿಸಲಾಗುವುದು ಎಂದರು.

ADVERTISEMENT

ರಾಜೀನಾಮೆ ನೀಡಲು ಪ್ರಿಯಾಂಕ್‌ ಖರ್ಗೆ ಒತ್ತಾಯ ಮಾಡಿದ ವಿಷಯ ಕುರಿತು ಪ್ರತಿಕ್ರಿಯಿಸಿದ ಛಲವಾದಿ ನಾರಾಯಣಸ್ವಾಮಿ, ‘ಅಂಬೇಡ್ಕರ್‌ ಅವರು ಬರೆದ ಪತ್ರದಲ್ಲಿ ಬೇರೊಬ್ಬರು ಹೇಳಿದನ್ನು ಉಲ್ಲೇಖಿಸಿದ್ದಾರೆ ಅಷ್ಟೆ. ಸಾವರ್ಕರ್‌ ಬಗ್ಗೆ ಅವರು ಸ್ವತಃ ಆರೋಪ ಮಾಡಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.