ADVERTISEMENT

₹1,800 ಕೋಟಿ ಕಪ್ಪ ಮರೆತಿರಾ: ಬಿಜೆಪಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 10:57 IST
Last Updated 21 ಅಕ್ಟೋಬರ್ 2025, 10:57 IST
   

ಬೆಂಗಳೂರು: ‘ಹೈಕಮಾಂಡ್‌ಗೆ ₹1,800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ರಾಜ್ಯ ಬಿಜೆಪಿ ನಾಯಕರು ಮರೆತಿದ್ದಾರೆಯೇ?’ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

‘ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ’ ಎಂಬ ಸಂಸದ ಬಿ.ವೈ.ರಾಘವೇಂದ್ರ ಅವರ ಆರೋಪಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌, ‘ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ’ ಎಂದು ಹೇಳಿದ್ದಾರೆ.

‘ಬಿಜೆಪಿ ಹೈಕಮಾಂಡ್‌ಗೆ ಕಪ್ಪ ನೀಡಿರುವ ವಿಚಾರವನ್ನು ರಾಜ್ಯ ಬಿಜೆಪಿ ನಾಯಕರು ಮರೆತಿದ್ದರೆ ಅದನ್ನು ನಾವು ಮತ್ತೊಮ್ಮೆ ನೆನಪಿಸುತ್ತೇವೆ. ಸಂಸದ ಬಿ.ವೈ ರಾಘವೇಂದ್ರರವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ’ ಎಂದಿದ್ದಾರೆ.

ADVERTISEMENT

‘ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ ₹ 60 ಕೋಟಿ– ₹70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ
ಬಹಿರಂಗಪಡಿಸಿದ್ದರು’ ಎಂದು ಹೇಳಿದ್ದಾರೆ.

‘ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ’ ಎಂದೂ ಹೇಳಿದ್ದಾರೆ.

ಏನತ್ಮಧ್ಯೆ, ರಾಘವೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ನೀಡಿರುವ ಬಗ್ಗೆ ದಾಖಲೆ ಇದ್ದರೆ ಅವರು ಬಿಡುಗಡೆ ಮಾಡಲಿ. ಸುಳ್ಳಿಗೆ ಮತ್ತೊಂದು ಹೆಸರು ರಾಘವೇಂದ್ರ ಎಂದು ಆಗುವುದು ಬೇಡ’ ಎಂದು ಹೇಳಿದ್ದರು.

ರಾಜ್ಯದಲ್ಲಿ ಭ್ರಷ್ಟಾಚಾರ ಕೊಳೆತು ನಾರುತ್ತಿದೆ: ಬಿ.ವೈ.ವಿಜಯೇಂದ್ರ

‘ಇವರ ಸರ್ಕಾರದಲ್ಲೇ ಭ್ರಷ್ಟಾಚಾರ ಕೊಳೆತು ನಾರುತ್ತಿದೆ. ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಈ ಕುರಿತು ಪತ್ರ ಬರೆದಿದ್ದಾರೆ. ಅದಕ್ಕಿಂತ ಸಾಕ್ಷ್ಯ ಬೇಕಾ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

ಯಡಿಯೂರಪ್ಪ–ಅನಂತಕುಮಾರ್ ಅವರ ಮಾತುಗಳ ವಿಡಿಯೊ ದೃಶ್ಯಾವಳಿ ಕುರಿತ ಪ್ರಶ್ನೆಗೆ
ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಯಡಿಯೂರಪ್ಪ ಮತ್ತು ಅನಂತಕುಮಾರ್‌ ಮಾತನಾಡಿರುವ ಹಿನ್ನೆಲೆ ಅರ್ಥ ಮಾಡಿಕೊಳ್ಳದೇ ಸುಮ್ಮನೆ ಮಾತನಾಡುತ್ತಿದ್ದಾರೆ’ ಎಂದು ಕಿಡಿ ಕಾರಿದರು.

‘ಮರಳು ಮಾಫಿಯಾದಿಂದ ಸರ್ಕಾರದ ಬೊಕ್ಕಸಕ್ಕೆ ₹400 ಕೋಟಿ ನಷ್ಟವಾಗುತ್ತಿದೆ ಎಂದು ರಾಯರಡ್ಡಿ ಪತ್ರ ಬರೆದು ಹೇಳಿದ್ದಾರೆ. ಇದೊಂದು ದೊಡ್ಡ ಹಗರಣ’ ಎಂದು ವಿಜಯೇಂದ್ರ ಹೇಳಿದರು.

‘ಎಲ್‌ಒಸಿ ಬಿಡುಗಡೆಗೆ ಗುತ್ತಿಗೆದಾರರಿಂದ ಶೇ 60 ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಈ ವಿಚಾರ ಮಾತನಾಡಲಿ’ ಎಂದು ಅವರು ಹೇಳಿದರು.

‘ಕಾಂಗ್ರೆಸ್‌ ಹೈಕಮಾಂಡ್‌ ಮತ್ತು ರಾಹುಲ್‌ಗಾಂಧಿಗೆ ಕರ್ನಾಟಕ ಎಟಿಎಂ ಆಗಿದೆ. ಇದೇ ಸಿದ್ದರಾಮಯ್ಯ ಸರ್ಕಾರದ ಎರಡೂವರೆ ವರ್ಷಗಳ ಸಾಧನೆ’ ಎಂದು ಅವರು ಹೇಳಿದರು.

‘ಕರ್ನಾಟಕದ ಹಣಕಾಸು ಪರಿಸ್ಥಿತಿ ಹದಗೆಟ್ಟಿದೆ. ಒಂದು ಕಡೆ ಅಭಿವೃದ್ಧಿಗೆ ಕೊಡಲು ಹಣವಿಲ್ಲ. ನೌಕರರಿಗೆ ವೇತನ ಸರಿಯಾಗಿ ಪಾವತಿ ಆಗುತ್ತಿಲ್ಲ. ಮಂಡ್ಯದಲ್ಲಿ ವಿಆರ್‌ಎಸ್‌ ಹಣ ಬಂದಿಲ್ಲ ಎಂದು ನಿವೃತ್ತ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡರು. ಕಲಬುರಗಿಯಲ್ಲಿ 6 ತಿಂಗಳು ಸಂಬಳ ಬಂದಿಲ್ಲ ಎಂದು ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡರು. ಎಷ್ಟೋ ನೌಕರರು ಸಂಬಳ
ಇಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ’ ಎಂದು ದೂರಿದರು.

‘ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ’

‘ರಾಜ್ಯ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ ಕೆಲಸ ಮಾಡುತ್ತಿದೆ. ಬಿಹಾರ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ನಿಮ್ಮ ಕಪೋಲಕಲ್ಪಿತ ಆರೋಪ ಹಾಸ್ಯಾಸ್ಪದ. ನಿಮ್ಮ ಸುಳ್ಳಿನ ಸರಮಾಲೆಗೆ ಕೊನೆಯೇ ಇಲ್ಲವೇ’ ಎಂದು ಬಿಜೆಪಿ ನಾಯಕರನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

‘ಚುನಾವಣೆಗೆ ಅಕ್ರಮ ಭ್ರಷ್ಟಾಚಾರದ ಹಣವನ್ನು ಬಳಸುವುದು ನಿಮ್ಮ ಜಾಯಮಾನ, ಕಾಂಗ್ರೆಸ್‌ನದ್ದಲ್ಲ. 2008-2013 ಮತ್ತು 2019-2023ರ ಅವಧಿಗಳಲ್ಲಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಚುನಾವಣೆಗಳು ನಡೆದವು. ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ಕಳುಹಿಸಿರುವ ನಿಮಗೆ, ಜನತೆಯ ಮುಂದೆ ಉತ್ತರಿಸುವ ಧೈರ್ಯ ಇದೆಯೇ’ ಎಂದೂ ಕೇಳಿದ್ದಾರೆ. ‘ಹಣದ ಹೊಳೆ ಹರಿಸಿ, ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ ‘ಆಪರೇಷನ್ ಕಮಲ’ದ ಪಿತಾಮಹರು ನೀವು. ಇಂದು ಶುದ್ಧ ಹಸ್ತರೆಂದು ಬಿಂಬಿಸಿಕೊಳ್ಳಲು ಹೊರಟಿರುವುದು ಅತಿದೊಡ್ಡ ಜೋಕ್. ಅಧಿಕಾರಕ್ಕಾಗಿ ನೀವು ಖರೀದಿಸಿದ ಕ್ರಿಮಿನಲ್ ಹಿನ್ನೆಲೆಯ ಶಾಸಕರನ್ನು ಕರ್ನಾಟಕ ಎಂದಿಗೂ ಮರೆಯುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.